ಮಧುಗಿರಿ: ಇನ್ನೊಂದು ವರ್ಷದಲ್ಲಿ ಸರ್ಕಾರಿ ಡಿಪ್ಲೊಮಾ ಕಾಲೇಜು ಕಟ್ಟಡ ಪೂರ್ಣಗೊಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ತಿಳಿಸಿದರು.
ಪಟ್ಟಣದ ಪಾವಗಡ- ಮಧುಗಿರಿ ಬೈಪಾಸ್ ರಸ್ತೆ ಸಮೀಪ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಗುರುವಡೇರಹಳ್ಳಿಯಲ್ಲಿ ₹8 ಕೋಟಿ ವೆಚ್ಚದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿ ಮಾತನಾಡಿದರು.
ಡಿಪ್ಲೊಮಾ ಕಾಲೇಜು ಆರಂಭವಾದರೆ ಸ್ಥಳೀಯರಿಗೆ ಹೆಚ್ಚು ಉಪಯೋಗವಾಗುವುದರ ಜೊತೆಯಲ್ಲಿ ತಾಂತ್ರಿಕ ನೈಪುಣ್ಯ ಪಡೆಯಲು ಸಾಧ್ಯ. ಹಂತ ಹಂತವಾಗಿ ಅವಶ್ಯಕತೆಗೆ ತಕ್ಕಂತೆ ತಾಂತ್ರಿಕ ವಿಭಾಗ ಹೆಚ್ಚಿಸಲಾಗುವುದು ಎಂದು ಹೇಳಿದರು.
ಕಾಮಗಾರಿಗೆ ಅಗತ್ಯ ಸೌಲಭ್ಯಗಳನ್ನು ಸ್ಥಳೀಯ ಅಧಿಕಾರಿಗಳು ನೀಡಬೇಕು ಹಾಗೂ ಕಾಲೇಜಿನ ರಸ್ತೆ ನಿರ್ಮಾಣಕ್ಕೆ ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ತುಮಕೂರು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಎಸ್.ಚಂದ್ರಶೇಖರ್, ಮಧುಗಿರಿ ಸರ್ಕಾರಿ ಪಾಲಿಟೆಕ್ನಿಕ್ ವಿಶೇಷಾಧಿಕಾರಿ ಟಿ.ಎನ್.ರವಿಪ್ರಕಾಶ್, ತಾಪಂ ಇಒ ಲಕ್ಷಣ್, ಎಡಿಒ ಮಧುಸೂಧನ್, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡರಾಜು, ಪುರಸಭೆ ಸದಸ್ಯರಾದ ಲಾಲಪೇಟೆ ಮಂಜುನಾಥ್, ಮಂಜುನಾಥ್ ಆಚಾರ್, ವಾಲ್ಮೀಕಿ ವಿದ್ಯಾವರ್ಧಕ ಸಂಘದ ಜಿಲ್ಲಾ ಅಧ್ಯಕ್ಷ ಪುರುಷೋತ್ತಮ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.