ತುಮಕೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿರುವುದನ್ನು ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷ ಖಂಡಿಸಿದೆ.
ಚುನಾವಣೆ ಮುಗಿಯುತ್ತಿದ್ದಂತೆ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಹೆಚ್ಚಳ ಮಾಡಿ ಲೀಟರಿಗೆ ತಲಾ ₹3 ಹೆಚ್ಚಿಸಿದ್ದಾರೆ. ಇದರಿಂದ ರಾಜ್ಯ ಖಜಾನೆಗೆ ಈ ಆರ್ಥಿಕ ವರ್ಷದಲ್ಲಿ ಸುಮಾರು ₹3 ಸಾವಿರ ಕೋಟಿ ಹೆಚ್ಚುವರಿ ತೆರಿಗೆ ಸಂದಾಯವಾಗಲಿದೆ. ಇದರಿಂದ ಸಾರಿಗೆ, ಸರಕು ಸಾಗಾಣಿಕೆ ವೆಚ್ಚ ಏರಿಕೆಯಾಗಿ ಜನರ ಬದುಕಿನ ಮೇಲೆ ಪರಿಣಾಮ ಬೀರಲಿದೆ ಎಂದು ರಾಜ್ಯ ಕಾರ್ಯದರ್ಶಿ ಕೆ.ಉಮಾ, ಜಿಲ್ಲಾ ಕಾರ್ಯದರ್ಶಿ ಎಸ್.ಎನ್.ಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.
ತರಕಾರಿ, ದವಸ ಧಾನ್ಯಗಳ ಬೆಲೆ ಏರಿಕೆಯಿಂದ ಕಂಗಾಲಾದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಲೋಕಸಭಾ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರವು ಮತದಾರರನ್ನು ಓಲೈಸಲು ಪೆಟ್ರೋಲ್, ಡೀಸೆಲ್ ದರ ₹2 ಕಡಿತ ಮಾಡಿತ್ತು. ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಜನ ವಿರೋಧಿ ತೀರ್ಮಾನ ಕೈಗೊಂಡಿದೆ. ಚುನಾವಣೆಗೂ ಮೊದಲು ಬೆಲೆ ಏರಿಕೆಯ ಕುರಿತು ಮಾತನಾಡಿ ಅಧಿಕಾರಕ್ಕೆ ಬಂದ ನಂತರ ಜನರಿಗೆ ವಂಚಿಸಿದೆ. ಸರ್ಕಾರ ಕೂಡಲೇ ಬೆಲೆ ಏರಿಕೆಯ ನಿರ್ಧಾರವನ್ನು ತಕ್ಷಣಕ್ಕೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.