ತುಮಕೂರು: ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಬುಧವಾರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕದಾಸಪ್ಪ (76), ಪೆದ್ದಣ್ಣ (74), ಮಧುಗಿರಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮೀನಾಕ್ಷಿ (3) ಮೃತಪಟ್ಟಿದ್ದರು. ಇದಕ್ಕೂ ಮುನ್ನ ಜೂನ್ 10ರಂದು ಹನುಮಕ್ಕ (85), 11ರಂದು ನಾಗಪ್ಪ (85), ನಾಗಮ್ಮ (90) ಚಿನ್ನೇನಹಳ್ಳಿಯಲ್ಲೇ ಮೃತಪಟ್ಟಿದ್ದಾರೆ.
ಒಂದೇ ದಿನ ಮೂವರು ಸಾವನ್ನಪ್ಪಿದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಜಿಲ್ಲಾ ಆಸ್ಪತ್ರೆಗೆ ಗುರುವಾರ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಈ ಬೆಳವಣಿಗೆಯ ನಂತರ ಕಲುಷಿತ ನೀರು ಸೇವಿಸಿ ಈ ಹಿಂದೆಯೇ ಮೂರು ಜನ ಮೃತಪಟ್ಟ ಮಾಹಿತಿ ಗೊತ್ತಾಗಿದೆ.
ಹನುಮಕ್ಕ, ನಾಗಪ್ಪ, ನಾಗಮ್ಮ ಸಾವಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಬೇರೆ ಕಾರಣ ಹೇಳುತ್ತಿದ್ದಾರೆ. ‘ಇಬ್ಬರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹಾಗಾಗಿ ಅವರು ಸಾವನ್ನಪ್ಪಿದ್ದಾರೆ’ ಎಂಬುವುದು ಅಧಿಕಾರಿಗಳ ವಾದ. ಆದರೆ ‘ಮೂರು ಜನ ಸಾವಿಗೂ ಮುನ್ನ ವಾಂತಿ, ಭೇದಿಯಿಂದ ಬಳಲುತ್ತಿದ್ದರು’ ಎಂದು ಗ್ರಾಮಸ್ಥರು, ಕುಟುಂದವರು ಹೇಳುತ್ತಿದ್ದಾರೆ.
‘ಕುಡಿಯುವ ನೀರಿನ ಮೂಲಗಳನ್ನು ಸ್ವಚ್ಛಗೊಳಿಸುವುದು ಅಧಿಕಾರಿಗಳ ಜವಾಬ್ದಾರಿ. ಪಂಚಾಯಿತಿ ಮತ್ತು ತಾಲ್ಲೂಕು ಆಡಳಿತ ಜನರಿಗೆ ಶುದ್ಧ ನೀರು ಪೂರೈಸುವಲ್ಲಿ ವಿಫಲವಾಗಿದೆ. ಹಲವು ದಿನಗಳಿಂದ ಓವರ್ ಹೆಡ್ ಟ್ಯಾಂಕ್ ಸ್ವಚ್ಛಗೊಳಿಸಿಲ್ಲ. ಕುಡಿಯುವ ನೀರು ಪೂರೈಕೆಯಾಗುವ ನಲ್ಲಿಗಳಲ್ಲಿ ಕಲುಷಿತ ನೀರು ಸರಬರಾಜಾಗಿದೆ. ಇದೇ ನೀರು ಕುಡಿದವರು ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂದು ಚಿನ್ನೇನಹಳ್ಳಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಿಡಿಒ, ವಾಟರ್ಮ್ಯಾನ್ ಅಮಾನತು: ಘಟನೆಗೆ ಸಂಬಂಧಿಸಿದಂತೆ ಚಿನ್ನೇನಹಳ್ಳಿ ಗ್ರಾಮ ಪಂಚಾಯಿತಿ ಪ್ರಭಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ.ಮುನಿರಾಜು, ವಾಟರ್ಮ್ಯಾನ್ ಎಸ್.ನಾಗರಾಜು ಅವರನ್ನು ಅಮಾನತುಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.