ತುಮಕೂರು: ಸತತ ಮಳೆಯಿಂದಾಗಿ ಸಾಕಷ್ಟು ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಅ.28 ಹಾಗೂ 29ರಂದು ಬೆಳೆ ಸಮೀಕ್ಷೆ ಮಾಡಲಾಗುತ್ತದೆ.
ಬೆಳೆ ಹಾನಿ ಪ್ರದೇಶಕ್ಕೆ ಕಂದಾಯ, ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಭೇಟಿನೀಡಿ ಎರಡು ದಿನಗಳ ಕಾಲ ಸಮೀಕ್ಷೆ ಕೈಗೊಳ್ಳಲಿದ್ದಾರೆ.
ಜಿಲ್ಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ 115.2 ಮಿ.ಮೀ ವಾಡಿಕೆ ಮಳೆಯಾಗಬೇಕಿದ್ದು, ಈವರೆಗೆ 271.30 ಮಿ.ಮೀ ಮಳೆಯಾಗಿದೆ. ಸರಾಸರಿಗಿಂತ ಶೇ 136ರಷ್ಟು ಅಧಿಕ ಮಳೆ ಬಿದ್ದಿದೆ. ಈವರೆಗೆ 93.68 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿಯಾಗಿದೆ ಎಂದು ಇಲಾಖೆ ತಿಳಿಸಿದೆ.
ಬೆಳೆ ಹಾನಿಯಾದ ರೈತ ಫಲಾನುಭವಿಗಳ ವಿವರಗಳನ್ನು ಗ್ರಾಮ ಪಂಚಾಯಿತಿ, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿ, ತಾಲ್ಲೂಕು ಕಚೇರಿಗಳಲ್ಲಿ ಈಗಾಗಲೇ ಪ್ರಕಟಿಸಲಾಗಿದೆ. ಬೆಳೆ ಹಾನಿಯಾಗಿದ್ದರೆ, ಯಾವುದೇ ದೂರುಗಳಿದ್ದರೆ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ.
ಮಾಹಿತಿಗೆ ಮೊ 9686503500 ಸಂಪರ್ಕಿಸುವಂತೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.