ADVERTISEMENT

ಡಾಟಾ ಎಂಟ್ರಿ ಆಪರೇಟರ್‌ಗೆ 4 ವರ್ಷ ಸಜೆ

₹4 ಸಾವಿರ ಲಂಚಕ್ಕೆ ಬೇಡಿಕೆ

​ಪ್ರಜಾವಾಣಿ ವಾರ್ತೆ
Published 13 ಜೂನ್ 2024, 3:09 IST
Last Updated 13 ಜೂನ್ 2024, 3:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ತುಮಕೂರು: ಬಸವ ವಸತಿ ಯೋಜನೆಯ ಹಣ ಬಿಡುಗಡೆ ಮಾಡಲು ₹4 ಸಾವಿರ ಲಂಚ ತೆಗೆದುಕೊಳ್ಳುವಾಗ ಸಿಕ್ಕಿ ಬಿದ್ದಿದ್ದ ಕೊರಟಗೆರೆ ತಾಲ್ಲೂಕಿನ ಬಿಡಿಪುರ ಗ್ರಾಮ ಪಂಚಾಯಿತಿ ಡಾಟಾ ಎಂಟ್ರಿ ಆಪರೇಟರ್‌ ಟಿ.ಎಲ್‌.ಹರೀಶ್‌ ಎಂಬುವರಿಗೆ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿದೆ.

ಬೊಮ್ಮಲದೇವಿ ಗ್ರಾಮದ ದತ್ತಾತ್ರೇಯ ಎಂಬುವರಿಂದ ₹5 ಸಾವಿರ ಹಣ ಪಡೆದು, ಮತ್ತೆ ₹4 ಸಾವಿರ ಕೊಡುವಂತೆ ಒತ್ತಾಯಿಸಿದ್ದರು. ದತ್ತಾತ್ರೇಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ನೀಡಿದ್ದರು. ಹರೀಶ್‌ ₹4 ಸಾವಿರ ಹಣ ತೆಗೆದುಕೊಳ್ಳುವಾಗ ಸಿಕ್ಕಿ ಬಿದ್ದಿದ್ದರು. ಎಸಿಬಿಯ ಡಿವೈಎಸ್‌ಪಿ ಬಿ.ಉಮಾಶಂಕರ್‌ ಪ್ರಕರಣ ದಾಖಲಿಸಿಕೊಂಡಿದ್ದರು. ಇನ್‌ಸ್ಪೆಕ್ಟರ್‌ ಎಚ್‌.ಸುನೀಲ್‌ಕುಮಾರ್‌, ಎನ್‌.ವೀರೇಂದ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಬುಧವಾರ ಸದರಿ ಪ್ರಕರಣದ ಕುರಿತು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಟಿ.ಪಿ.ರಾಮಲಿಂಗೇಗೌಡ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಆರ್‌.ಪಿ.ಪ್ರಕಾಶ್‌ ವಾದ ಮಂಡಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.