ADVERTISEMENT

ಹಕ್ಕುಪತ್ರ ವಿತರಣೆ ವಿಳಂಬ: ಅಸಮಾಧಾನ

ಕೆಐಎಡಿಬಿಗೆ ಜಮೀನು ನೀಡಲು ಶಾಸಕರ ವಿರೋಧ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 16:22 IST
Last Updated 2 ಜುಲೈ 2024, 16:22 IST
ಬಿ.ಸುರೇಶ್‌ಗೌಡ
ಬಿ.ಸುರೇಶ್‌ಗೌಡ   

ತುಮಕೂರು: ‘ರೈತರ ಕೃಷಿ ಜಮೀನು, ಬಗರ್‌ ಹುಕುಂ ಸಾಗುವಳಿ ಸಮಿತಿಗೆ ಅರ್ಜಿ ಸಲ್ಲಿಸಿರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಕೆಐಎಡಿಬಿಗೆ ಹಸ್ತಾಂತರಿಸಲು ಬಿಡುವುದಿಲ್ಲ’ ಎಂದು ಶಾಸಕ ಬಿ.ಸುರೇಶ್‌ಗೌಡ ಭರವಸೆ ನೀಡಿದರು.

ನಗರದಲ್ಲಿ ಸೋಮವಾರ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸಭೆ ನಡೆಸಿದರು. ಬಗರ್‌ ಹುಕುಂ ಸಾಗುವಳಿ ಹಕ್ಕುಪತ್ರ ವಿತರಣೆಯಲ್ಲಿ ವಿಳಂಬ ತೋರಿದ ತಹಶೀಲ್ದಾರ್‌ ಸಿದ್ದೇಶ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ 1994ರಿಂದ 2022ರ ವರೆಗೆ ಸಮಿತಿಗೆ 6,079 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 1,230 ಅರ್ಜಿಗಳು ಸಕ್ರಮವಾಗಿದ್ದರೂ ಹಕ್ಕುಪತ್ರ ವಿತರಿಸಿಲ್ಲ. ಯಾವುದೇ ಅಧಿಸೂಚನೆ ಇಲ್ಲದೆ ಗೋಮಾಳವನ್ನು ಕೆಐಎಡಿಬಿಗೆ ನೀಡಲಾಗುತ್ತಿದೆ. ಅದೇ ರೈತರಿಗೆ ಕೃಷಿ ಜಮೀನು ನೀಡಲು ನೂರೆಂಟು ಕಾನೂನುಗಳು ಅಡ್ಡಿ ಬರುತ್ತವೆ ಎಂದು ತರಾಟೆಗೆ ತೆಗೆದುಕೊಂಡರು.

ADVERTISEMENT

ಸಲ್ಲಿಕೆಯಾಗಿರುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಬೇಕು. ಒಂದು ತಿಂಗಳಲ್ಲಿ ಅರ್ಹರಿಗೆ ಸಾಗುವಳಿ ಚೀಟಿ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಸರ್ಕಾರಿ ಜಮೀನುಗಳಲ್ಲಿ ದಶಕಗಳಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಅನ್ಯಾಯವಾಗದಂತೆ‌ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಹೆಬ್ಬೂರು, ಬೆಳ್ಳಾವಿ ಕಂದಾಯ ನಿರೀಕ್ಷಕರ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿವೆ. ಇದೇ ರೀತಿ ಮುಂದುವರಿದರೆ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ನಾಮನಿರ್ದೇಶಿತ ಸದಸ್ಯರಾದ ಕರೆರಂಗಯ್ಯ, ಶಿವರಾಜ್, ರೂಪಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.