ADVERTISEMENT

ತುಮಕೂರು: ಅನಂತಕುಮಾರ ಹೆಗಡೆ ಗಡಿಪಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಜನವರಿ 2024, 6:58 IST
Last Updated 18 ಜನವರಿ 2024, 6:58 IST
ತುಮಕೂರಿನಲ್ಲಿ ಬುಧವಾರ ತಹಶೀಲ್ದಾರ್ ಎಂ.ಸಿದ್ದೇಶ್ ಅವರಿಗೆ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಮನವಿ ಸಲ್ಲಿಸಿದರು
ತುಮಕೂರಿನಲ್ಲಿ ಬುಧವಾರ ತಹಶೀಲ್ದಾರ್ ಎಂ.ಸಿದ್ದೇಶ್ ಅವರಿಗೆ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಮನವಿ ಸಲ್ಲಿಸಿದರು   

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿ, ಅವಹೇಳನ ಮಾಡಿರುವ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಉತ್ತರ ಕನ್ನಡ ಜಿಲ್ಲೆ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಗಡಿಪಾರು ಮಾಡುವಂತೆ ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾ ಘಟಕ ಒತ್ತಾಯಿಸಿದೆ.

ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದ ಒಕ್ಕೂಟದ ಪದಾಧಿಕಾರಿಗಳು, ‘ಹೆಗಡೆ ನೀಡಿರುವ ಪ್ರಚೋದನಾಕಾರಿ ಹೇಳಿಕೆಯನ್ನು ಖಂಡಿಸುವ ದೃಷ್ಟಿಯಿಂದ ಕೂಡಲೇ ಬಂಧಿಸಿ ಕ್ರಿಮಿನಲ್ ಕೇಸ್ ದಾಖಲಿಸಬೇಕು’ ಎಂದು ಆಗ್ರಹಿಸಿದರು.

ಇತ್ತೀಚೆಗೆ ಕುಮಟಾದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿ ಹೇಳಿಕೆ ನೀಡಿದ್ದಾರೆ. ಒಬ್ಬ ಜನಪ್ರತಿನಿಧಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಅಗೌರವ ತೋರಿದ್ದಾರೆ. ‘ಹಿಂದೂ ಸಮಾಜವನ್ನು ಜಾತಿ, ಧರ್ಮ, ಭಾಷೆಯ ಹೆಸರಿನಲ್ಲಿ ಮುರುಕುರಾಮಯ್ಯ ಅಂತಹವರು ಒಡೆಯುತ್ತಿದ್ದಾರೆ. ಜ. 22ರಂದು ರಾಮಮಂದಿರಕ್ಕೆ ಹೋಗಲ್ಲ, ಅದಾದ ಮೇಲೆ ಹೋಗುತ್ತೇನೆ’ ಎಂದು ಸಿದ್ದರಾಮಯ್ಯ ಹೇಳಿರುವ ಮಾತನ್ನು ಅಣಕಿಸಿ ‘ನೀನು ಹೋಗು ಬಿಡು, ರಾಮಮಂದಿರ ನಿಲ್ಲಲ್ಲ ಮಗನೇ’ ಎಂದು ಏಕವಚನದಲ್ಲಿ ನಿಂದನೆ ಮಾಡಿರುವುದು ಕೇಂದ್ರದ ಮಾಜಿ ಸಚಿವರಿಗೆ ಶೋಭೆ ತರುವುದಿಲ್ಲ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ADVERTISEMENT

ಮಸೀದಿಗಳನ್ನು ಧ್ವಂಸ ಮಾಡುವುದಾಗಿ ಹೇಳಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಪ್ರಚೋದನಾಕಾರಿ ಹೇಳಿಕೆಯನ್ನು ನೀಡಿ ರಾಜ್ಯದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಧನಿಯಕುಮಾರ್, ಪದಾಧಿಕಾರಿಗಳಾದ ಶಾಂತಕುಮಾರ್, ಪಿ.ಮೂರ್ತಿ, ವೆಂಕಟರಾಮಯ್ಯ, ಕೆಂಪನರಸಯ್ಯ, ಎಚ್.ಎಂ.ಶ್ರೀನಿವಾಸ್, ಚೇತನ, ಬಿ.ಟಿ.ವಸಂತಕುಮಾರ್, ಸತೀಶ್ ಕುಮಾರ್, ಗುರುಪ್ರಸಾದ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.