ಚಿಕ್ಕನಾಯಕನಹಳ್ಳಿ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ದತ್ತಮಾಲೆಯನ್ನಾದರೂ ಹಾಕಲಿ, ಬೇಕಾದರೆ ಕಾವಿ ತೊಟ್ಟು ಸ್ವಾಮೀಜಿಯಾದರೂ ಆಗಲಿ. ನಾನು ಹೋಗಿ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದು ಬರುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
‘ದತ್ತಮಾಲೆ ಹಾಕಿದರೆ ತಪ್ಪೇನಿದೆ’ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪಟ್ಟಣದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಜಿಲ್ಲೆಯಲ್ಲಿ ಪಂಚಾಯಿತಿಗೊಂದರಂತೆ ಸಹಕಾರ ಸಂಘ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 330 ಗ್ರಾಮ ಪಂಚಾಯಿತಿ ಮಟ್ಟದಲ್ಲಿ 230 ಸಹಕಾರಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಹೊಸದಾಗಿ ನೂರು ಸಹಕಾರಿ ಸಂಸ್ಥೆಗಳನ್ನು ಡಿಸೆಂಬರ್ ಅಂತ್ಯದೊಳಗೆ ತೆರೆಯಲಾಗುವುದು. ಕೆಲ ಕಾನೂನು ತೊಡಕು ಸರಿಪಡಿಸಿದ ನಂತರ ನೂತನ ಸಹಕಾರ ಸಂಘಗಳಿಗೆ ಚಾಲನೆ ನೀಡಲಾಗುವುದು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್, ಜಿಲ್ಲಾ ಸಹಕಾರಿ ಬ್ಯಾಂಕ್ ನಿರ್ದೇಶಕ ಸಿಂಗದಳ್ಳಿ ರಾಜಕುಮಾರ್, ತಾ.ಪಂ ಮಾಜಿ ಅಧ್ಯಕ್ಷ ಶಶಿಧರ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ರಾಧಾ ತಿಪ್ಪೇಸ್ವಾಮಿ, ಸಾಯಿಗಂಗಾ ಆಸ್ಪತ್ರೆ ಮುಖ್ಯಸ್ಥ ಡಾ. ವಿಜಯರಾಘವೇಂದ್ರ, ಕೆ.ಜಿ. ಕೃಷ್ಣೇಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.