ತುಮಕೂರು: ‘ಇತ್ತೀಚಿನ ದಿನಗಳಲ್ಲಿ 11, 12 ವರ್ಷದ ಮಕ್ಕಳು ಮಾದಕ ವಸ್ತು ಸೇವಿಸುತ್ತಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಪಿಜಿ ಮತ್ತು ಹಾಸ್ಟೆಲ್ಗಳಲ್ಲಿ ಇರಿಸಲು ಭಯಪಡುತ್ತಿದ್ದಾರೆ’ ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಹೇಳಿದರು.
ವಿಶ್ವವಿದ್ಯಾಲಯದಲ್ಲಿ ಬುಧವಾರ ಮನೋವಿಜ್ಞಾನ ಅಧ್ಯಯನ, ಸಮಾಜಕಾರ್ಯ ಅಧ್ಯಯನ ವಿಭಾಗವು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಇತರೆ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಾಲಾ–ಕಾಲೇಜು ವಿದ್ಯಾರ್ಥಿಗಳು ಮಾದಕ ವ್ಯಸನಕ್ಕೆ ಹೆಚ್ಚು ಆಕರ್ಷಿತರಾಗುತ್ತಾರೆ. ದುರ್ಬಲ ಮನಸ್ಥಿತಿಯಿಂದ ಮಾದಕ ವಸ್ತು, ಮದ್ಯದ ಚಟಕ್ಕೆ ದಾಸರಾಗುತ್ತಿದ್ದಾರೆ. ಇದು ಬದುಕನ್ನು ಸರ್ವನಾಶ ಮಾಡಲಿದೆ ಎಂಬ ಸತ್ಯವನ್ನು ಅವರು ಅರಿತುಕೊಳ್ಳಬೇಕು ಎಂದರು.
ವಿ.ವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಸ್ನೇಹ ಮನೋವಿಕಾಸ ಕೇಂದ್ರದ ಮನೋವೈದ್ಯ ಲೋಕೇಶ್ ಬಾಬು, ವಿ.ವಿ ಕುಲಸಚಿವೆ ನಾಹಿದಾ ಜಮ್ ಜಮ್, ಸಮಾಜಕಾರ್ಯ ವಿಭಾಗದ ಅಧ್ಯಕ್ಷ ಪ್ರೊ.ಬಿ.ರಮೇಶ್, ಮನೋವಿಜ್ಞಾನ ಅಧ್ಯಯನ ವಿಭಾಗದ ಸಂಯೋಜಕ ಪ್ರೊ.ಕೆ.ಜಿ.ಪರಶುರಾಮ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಕೆ.ರವೀಂದ್ರ ನಾಯ್ಕ್, ಮನೋವೈದ್ಯ ಪ್ರದೀಪ್, ಅಚರ್ಡ್ ಸಂಸ್ಥೆ ನಿರ್ದೇಶಕ ಸದಾಶಿವಯ್ಯ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.