ಬೆಂಗಳೂರು: ಕೆಂಪೇಗೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ತಗ್ಗಿಸಲು ನಿರ್ಮಿಸಲು ಉದ್ದೇಶಿಸಿರುವ ತುಮಕೂರು–ಶಿರಾ ಮಧ್ಯ ಭಾಗದಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಬೇಕು ಎಂದು ಉತ್ತರ ಕರ್ನಾಟಕ ನಾಗರಿಕರ ಅಭಿವೃದ್ಧಿ ಸಂಘ ಆಗ್ರಹಿಸಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಮಹಾಂತೇಶ್ ಚರಂತಿಮಠ, ‘ಮೈಸೂರು ಭಾಗದಲ್ಲಿ ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸುವ ಕುರಿತು ಇತ್ತೀಚೆಗೆ ಚರ್ಚೆ ನಡೆದಿತ್ತು. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮೈಸೂರು ವಿಮಾನ ನಿಲ್ದಾಣಗಳ ಮಧ್ಯೆ 120 ಕಿ.ಮೀ. ಅಂತರವಿದೆ. ಇದೇ ಭಾಗದಲ್ಲಿ ಮತ್ತೊಂದು ವಿಮಾನ ನಿಲ್ದಾಣ ಮಾಡುವುದು ಸಮಂಜಸವಲ್ಲ. ಆದ್ದರಿಂದ, ತುಮಕೂರು–ಶಿರಾ ಮಧ್ಯ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಿಸುವುದು ಸೂಕ್ತ’ ಎಂದರು.
‘ತುಮಕೂರು ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ. ಜೊತೆಗೆ ಭೂಸ್ವಾದೀನ ಮತ್ತು ಕಾಮಗಾರಿ ವೆಚ್ಚವು ಕಡಿಮೆಯಾಗಲಿದ್ದು, ತ್ವರಿತವಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ. ಇದರಿಂದ, ಇಲ್ಲಿನ ರೈತರಿಗೆ, ಕೃಷಿ ಕಾರ್ಮಿಕರಿಗೆ ಆರ್ಥಿಕವಾಗಿ ಸಹಾಯವಾಗಲಿದ್ದು, ಉದ್ಯೋಗ ಸೃಷ್ಟಿಯೂ ಆಗಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.