ಕುಣಿಗಲ್: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಇನ್ನು ಮುಂದೆ ದ್ವೇಷದ ರಾಜಕಾರಣ ಇಲ್ಲ. ಏನಿದ್ದರೂ ಅಭಿವೃದ್ಧಿ ರಾಜಕಾರಣ ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.
ಪಟ್ಟಣದಲ್ಲಿ ಶನಿವಾರ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ತಾಲ್ಲೂಕಿನಲ್ಲಿ ಲೋಕಸಭೆ ಚುನಾವಣೆ ಮಹತ್ತರ ಬದಲಾವಣೆ ತರಲಿದೆ. ರಾಜಕೀಯ ಕಾರಣಗಳಿಂದಾಗಿ ದೂರವಾಗಿದ್ದ ಡಿ.ನಾಗರಾಜಯ್ಯ ಮತ್ತು ಡಿ.ಕೃಷ್ಣಕುಮಾರ್ ಕುಟುಂಬಗಳು ಒಂದಾಗಿವೆ. ಜತೆಗೆ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟಿನ ಪ್ರಯತ್ನದ ಫಲವಾಗಿ ಗೆಲುವು ಸಾಧ್ಯವಾಗಿದೆ ಎಂದರು.
ಮದ್ದೂರು ರಸ್ತೆ ರೈಲ್ವೆ ಸೇತುವೆ ದುರಸ್ತಿ ಕಾರ್ಯ ಮತ್ತು ಆಸ್ಪತ್ರೆ ಮೇಲ್ದರ್ಜೆಗೇರಿಸುವ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದರು.
ಮಾಜಿ ಸಚಿವ ಡಿ.ನಾಗರಾಜಯ್ಯ, ಮಾಜಿ ಸಂಸದ ಡಿ.ಕೆ.ಸುರೇಶ್, ಶಾಸಕ ಡಾ.ರಂಗನಾಥ್ ಹೇಮಾವತಿ ನೀರಿನ ವಿಚಾರದಲ್ಲಿ ತಾಲ್ಲೂಕಿನ ಜನರಿಗೆ ಅನ್ಯಾಯ ಮಾಡಿದ್ದಾರೆ. ಕುಣಿಗಲ್ ದೊಡ್ಡಕೆರೆ ನೀರು ಅಚ್ಚುಕಟ್ಟು ಪ್ರದೇಶಕ್ಕೆ ನೀರು ನೀಡುವಲ್ಲಿ ವಿಫಲರಾಗಿದ್ದಾರೆ. ಹೇಮಾವತಿ ನಾಲಾ ಕಾಮಗಾರಿ ಪೂರ್ಣಗೊಳಿಸುವಲ್ಲಿ ಮತ್ತು ನಾಲೆಗಾಗಿ ಜಮೀನು ನೀಡಿದ ರೈತರಿಗೆ ಪರಿಹಾರ ಕೊಡಿಸುವಲ್ಲಿ ವಿಫಲರಾಗಿದ್ದಾರೆ. ವಿತರಣೆ ನಾಲೆ 26 ಬಿಟ್ಟು, ಲಿಂಕ್ ಕೆನಾಲ್ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ತಾಲ್ಲೂಕಿಗೆ ಅನ್ಯಾಯವಾಗುತ್ತಿರುವುದರಿಂದ ಲಿಂಕ್ ಕೆನಾಲ್ಗೆ ಸಹಕಾರ ನೀಡುವುದಿಲ್ಲ ಎಂದು ತಿಳಿಸಿದರು.
ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್, ಮಾಜಿ ಸಂಸದ ಡಿ.ಕೆ ಸುರೇಶ್ ಕುಣಿಗಲ್ ತಾಲ್ಲೂಕಿನ ಹೇಮಾವತಿ ನೀರು ಮಾಗಡಿಗೆ ತೆಗೆದುಕೊಂಡು ಹೋಗಲು ಲಿಂಕ್ ಕೆನಾಲ್ ಯೋಜನೆ ಜಾರಿಗೆ ತಂದಿದ್ದಾರೆ. ಹೇಮಾವತಿ ಯೋಜನೆ ಹಣ ರಸ್ತೆ ನಿರ್ಮಾಣಕ್ಕೆ ಬಳಸಿ ಕಾಂಗ್ರೆಸ್ ಪರ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆಂಜನಪ್ಪ, ತಾಲ್ಲೂಕು ಅಧ್ಯಕ್ಷ ಬಿ.ಎನ್.ಜಗದೀಶ್, ಬಿಜೆಪಿ ಅಧ್ಯಕ್ಷ ಬಲರಾಂ, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಬಿ.ಎನ್.ಲೋಕೇಶ್, ಮುಖಂಡರಾದ ಕೆ.ಎಲ್.ಹರೀಶ್, ರಂಗಸ್ವಾಮಿ, ಹೇಮರಾಜು, ಹರೀಶ್ ನಾಯಕ್, ದೀಪೂ, ವೆಂಕಟೇಶ್, ಕಾಮನಹಳ್ಳಿ ರಾಮಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.