ತುಮಕೂರು: ಅನುದಾನ ದುರುಪಯೋಗ, ಕರ್ತವ್ಯ ಲೋಪ, ನಿರ್ಲಕ್ಷ್ಯದ ಆರೋಪದ ಮೇರೆಗೆ ತಾಲ್ಲೂಕಿನ ಹೆಗ್ಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಆರ್.ರಾಘವೇಂದ್ರ, ಗ್ರೇಡ್–2 ಕಾರ್ಯದರ್ಶಿ ಎಚ್.ಸಿ.ಹನುಮಂತರಾಜು ಅವರನ್ನು ಅಮಾನತುಗೊಳಿಸಿ ಜಿ.ಪಂ ಸಿಇಒ ಜಿ.ಪ್ರಭು ಆದೇಶಿಸಿದ್ದಾರೆ.
ಆಸ್ತಿ ತೆರಿಗೆಗೆ ವಿತರಿಸಲಾದ 6,346 ರಸೀದಿಗಳ ಪೈಕಿ 831 ರಸೀದಿಗಳನ್ನು ಪಂಚತಂತ್ರ 2.0 ತಂತ್ರಾಂಶದಿಂದ ರದ್ದು ಪಡಿಸಿರುವುದು ಪರಿಶೀಲನೆ ಸಮಯದಲ್ಲಿ ಕಂಡು ಬಂದಿದೆ. ರದ್ದುಪಡಿಸಿದ ರಸೀದಿಗಳಿಂದ ವಸೂಲಾದ ಹಣವನ್ನು ಪಂಚಾಯಿತಿ ಅಧಿಕೃತ ಬ್ಯಾಂಕ್ ಖಾತೆಗೆ ಜಮಾ ಮಾಡದೆ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ್ದಾರೆ. ನರೇಗಾ ಯೋಜನೆ ಪರಿಣಾಮಕಾರಿ ಅನುಷ್ಠಾನ, ಮಾನವ ದಿನಗಳ ಸೃಜನೆಯಲ್ಲಿ ವಿಫಲರಾಗಿದ್ದಾರೆ ಎಂಬ ಆರೋಪದ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.
ಆಸ್ತಿ ತೆರಿಗೆಯನ್ನು ಬ್ಯಾಂಕ್ ಖಾತೆಗೆ ಜಮಾ ಮಾಡುವುದು ವಿಳಂಬ, ಜಮಾಬಂದಿ ಸಭೆ ನಡೆಸಿ ಸರ್ಕಾರಕ್ಕೆ ನಿಯಮಾನುಸಾರ ವರದಿ ಸಲ್ಲಿಸದೆ ಕರ್ತವ್ಯ ಲೋಪ ಎಸಗಿದ್ದಾರೆ. ಈ ಎಲ್ಲ ಆರೋಪಗಳ ಕುರಿತು ಇಲಾಖೆ ವಿಚಾರಣೆ ಬಾಕಿ ಇರಿಸಿ, ತಕ್ಷಣದಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.