ಚಿಕ್ಕನಾಯಕನಹಳ್ಳಿ: ತುಮಕೂರು ಲೋಕಸಭೆ ಕ್ಷೇತ್ರದಿಂದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಂಭವವಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
ತಾಲ್ಲೂಕಿನ ಕಂದಿಕೆರೆಯಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ನಲ್ಲಿಯೇ ಇದ್ದ ಅವರು ಹಿಂದಿನ ಸರ್ಕಾರದ ಅವಧಿಯಲ್ಲಿ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದರು. ಮತ್ತೆ ಈಗ ಕಾಂಗ್ರೆಸ್ನಲ್ಲಿ ಸಕ್ರಿಯರಾಗಿದ್ದಾರೆ. ಸಂಸತ್ ಚುನಾವಣೆಗೆ ಅವರೇ ಸ್ಪರ್ಧಿಸುವ ಸಾಧ್ಯತೆ ಶೇ 99ರಷ್ಟಿದೆ ಎಂದು ಹೇಳಿದರು.
ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ರೈತರಿಗಾಗುತ್ತಿದ್ದ ವಂಚನೆ ತಡೆಗೆ ಎಲ್ಲ ಹಾಲಿನ ಡೇರಿಗಳಲ್ಲಿ ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿ (ಎನ್ಡಿಡಿಬಿ) ತಂತ್ರಾಂಶ ಅಳವಡಿಕೆಗೆ ಸರ್ಕಾರ ಮುಂದಾಗಿದೆ. ಇದರಿಂದ ರೈತರಿಗೆ ತಮ್ಮ ಹಾಲಿನ ಗುಣಮಟ್ಟಕ್ಕೆ ಅನುಸಾರ ಸೂಕ್ತ ದರ ಸಿಗಲಿದೆ ಎಂದರು.
‘ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಶೇ80ರಷ್ಟು ಜನರನ್ನು ತಲುಪಿವೆ. ಶಕ್ತಿ ಯೋಜನೆ ಪರಿಣಾಮ ಹಾಸನಾಂಬೆ ದರ್ಶನಕ್ಕೆ ಈ ವರ್ಷ 4.85ಲಕ್ಷ ಮಂದಿ ಭೇಟಿ ನೀಡಿದ್ದರು. ಇದರಿಂದ ₹9.75ಕೋಟಿ ಹುಂಡಿ ಹಣ ಸಂಗ್ರಹವಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ₹3 ಕೋಟಿ ಹೆಚ್ಚು ಸಂಗ್ರಹವಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.