ADVERTISEMENT

ತುಮಕೂರಿಗೂ ಮೈಸೂರು ದಸರಾ ಮಾದರಿ: ಜಿ.ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2024, 6:23 IST
Last Updated 22 ಸೆಪ್ಟೆಂಬರ್ 2024, 6:23 IST
ಜಿ.ಪರಮೇಶ್ವರ
ಜಿ.ಪರಮೇಶ್ವರ   

ತುಮಕೂರು: ನಗರದಲ್ಲಿ ಅ.11 ಹಾಗೂ 12ರಂದು ನಡೆಯುವ ‘ತುಮಕೂರು ದಸರಾ’ ಉತ್ಸವವನ್ನು ಮೈಸೂರು ದಸರಾ ಮಾದರಿಯಲ್ಲಿ ಆಚರಣೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾ ದಸರಾ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಮೊದಲ ಬಾರಿಗೆ ಜಿಲ್ಲಾ ಆಡಳಿತದ ವತಿಯಿಂದ ಆಚರಣೆ ಮಾಡುತ್ತಿದ್ದು, ಯಾವುದೇ ಲೋಪ, ದೋಷಗಳಾಗದಂತೆ ನೋಡಿಕೊಳ್ಳಬೇಕು. ಮಿನಿ ಮೈಸೂರು ದಸರಾ ಉತ್ಸವವನ್ನಾಗಿ ಆಚರಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ದಸರಾ ಸಮಿತಿ ಸಭೆ ನಡೆಸಿದರು. ಯಾವುದೇ ಜಾತಿ, ಮತ, ಧರ್ಮ ಹಾಗೂ ವೈಯಕ್ತಿಕ ಪ್ರತಿಷ್ಠೆಗಳಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ಉತ್ಸವದಲ್ಲಿ ಪಾಲ್ಗೊಳ್ಳಬೇಕು. ಸೌಹಾರ್ದತೆಯಿಂದ ಆಚರಣೆ ಮಾಡಬೇಕು ಎಂದು ಹೇಳಿದರು.

ADVERTISEMENT

ಮಹಿಳಾ ದಸರಾದಲ್ಲಿ ನಗರದ ವಿವಿಧ ವಾರ್ಡ್‍ಗಳಲ್ಲಿ ರಂಗೋಲಿ ಸ್ಪರ್ಧೆ, ದಸರಾ ಗೊಂಬೆ ಪ್ರದರ್ಶನ ಸ್ಪರ್ಧೆ ಏರ್ಪಡಿಸುವಂತೆ ಪಾಲಿಕೆ ಆಯುಕ್ತರಾದ ಬಿ.ವಿ.ಅಶ್ವಿಜ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಅವರಿಗೆ ನಿರ್ದೇಶನ ನೀಡಿದರು.

ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ‘ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರದ ವತಿಯಿಂದ ದಸರಾ ಆಯೋಜಿಸುತ್ತಿದ್ದು, ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ನಗರದ ಪ್ರಮುಖ ಬೀದಿ, ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಬೇಕು’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್, ‘ಎರಡು ದಿನಗಳ ಕಾಲ ನಡೆಯುವ ದಸರಾ ಉತ್ಸವದಲ್ಲಿ ಪ್ರಮುಖ ಗಾಯಕರಿಂದ ಗೀತಗಾಯನ, ಮಕ್ಕಳಿಂದ ಶಾಸ್ತ್ರೀಯ ಸಂಗೀತ, ಸ್ಥಳೀಯ ಕಲೆಗಳ ಪ್ರದರ್ಶನ, ಮ್ಯಾರಥಾನ್ ಸ್ಪರ್ಧೆ, ಕ್ರೀಡಾ ಸ್ಪರ್ಧೆ ಆಯೋಜಿಸಲಾಗುತ್ತಿದೆ. ಉತ್ಸವದ 2ನೇ ದಿನ ಅಂತಿಮವಾಗಿ ಜನಾಕರ್ಷಕವಾದ ದ್ರೋಣ್ ಪ್ರದರ್ಶನ, ಬಾಣ– ಬಿರುಸುಗಳ ಪ್ರದರ್ಶನ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ‘ಮೆರವಣಿಗೆಯಲ್ಲಿ 3 ಆನೆಗಳು, ಹಳ್ಳಿಕಾರ್ ಎತ್ತು, ಕುದುರೆ, ವಿಂಟೇಜ್ ಕಾರು, 70ಕ್ಕೂ ಹೆಚ್ಚು ದೇವರ ಉತ್ಸವ ಮೂರ್ತಿಗಳು, 15 ಕಲಾ ತಂಡಗಳು ಭಾಗವಹಿಸಲಿವೆ’ ಎಂದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿ.ಪಂ ಸಿಇಒ ಜಿ.ಪ್ರಭು, ಎಸ್ಪಿ ಕೆ.ವಿ.ಅಶೋಕ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ತಹಶೀಲ್ದಾರ್ ಸವಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.