ತುಮಕೂರು: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳ್ಳತನ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿಲ್ಲ. ವಾಹನ, ಮನೆಗಳ್ಳತನ ಪ್ರಕರಣಗಳು ದಿನೇ ದಿನೇ ಜಾಸ್ತಿಯಾಗುತ್ತಿವೆ.
ಯಾರೂ ಇಲ್ಲದ ಸಮಯ ನೋಡಿಕೊಂಡು ಮನೆಗಳಿಗೆ ನುಗ್ಗುವ ಕಳ್ಳರು ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಆಭರಣಗಳನ್ನು ಕದಿಯುತ್ತಿದ್ದಾರೆ. ಪೊಲೀಸರು ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೂ ಕಳ್ಳತನ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಭಾನುವಾರ ನಗರದ ಎರಡು ಮನೆಗಳಲ್ಲಿ ಕಳ್ಳತನವಾಗಿದ್ದು, 200 ಗ್ರಾಂ ಚಿನ್ನಾಭರಣ ದೋಚಿದ್ದಾರೆ.
ಕುವೆಂಪು ನಗರದ ಗೋಪಾಲಪ್ಪ ಎಂಬುವರ ಮನೆಯಲ್ಲಿ ಸುಮಾರು ₹7 ಲಕ್ಷ ಮೌಲ್ಯದ 144 ಗ್ರಾಂ ಚಿನ್ನಾಭರಣ, 700 ಗ್ರಾಂ ಬೆಳ್ಳಿಯ ಆಭರಣ ಕಳ್ಳತನವಾಗಿದೆ. ಗೋಪಾಲಪ್ಪ ಖಾಸಗಿ ನರ್ಸಿಂಗ್ ಹೋಮ್ನಲ್ಲಿ ಕೆಲಸ ಮಾಡುತ್ತಿದ್ದರು. ಅವರ ತಂಗಿಯ ಮನೆಯಲ್ಲಿ ಸತ್ಯನಾರಾಯಣ ಪೂಜೆಗಾಗಿ ಮನೆಯ ಎಲ್ಲರು ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಒಳ ನುಗ್ಗಿದ್ದ ಕಳ್ಳರು ಆಭರಣ ದೋಚಿದ್ದಾರೆ. ಹೊಸ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
59 ಗ್ರಾಂ ಚಿನ್ನಾಭರಣ ಕಳ್ಳತನ: ಪ್ರಗತಿ ಬಡಾವಣೆಯ ವೆಂಕಟೇಶ್ ಎಂಬುವರ ಮನೆಯಲ್ಲಿ ಅಂದಾಜು ₹2 ಲಕ್ಷ ಮೌಲ್ಯದ 59 ಗ್ರಾಂ ಚಿನ್ನಾಭರಣ ಕಳ್ಳತನವಾಗಿದೆ. ವೆಂಕಟೇಶ್ ಕುಟುಂಬದವರು ಮದುವೆಗಾಗಿ ಚಿತ್ರದುರ್ಗಕ್ಕೆ ಹೋಗಿದ್ದರು. ಮನೆಯಲ್ಲಿ ಯಾರೊಬ್ಬರೂ ಇರಲಿಲ್ಲ. ಮದುವೆ ಮುಗಿಸಿಕೊಂಡು ವಾಪಸ್ ಮನೆಗೆ ಬಂದು ನೋಡಿದಾಗ ಕಳ್ಳತನ ಆಗಿರುವುದು ಗಮನಕ್ಕೆ ಬಂದಿದೆ. ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಮನೆಯ ಎಲ್ಲರೂ ನಗರದಿಂದ ಹೊರಗಡೆ ಹೋದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಮನೆಯ ಮುಂದೆ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಸಲಾಗುತ್ತದೆ. ಇದು ಕಳ್ಳತನ ತಡೆಯುವಲ್ಲಿ ನೆರವಾಗಲಿದೆ. ಸಾರ್ವಜನಿಕರು ಎಚ್ಚೆತ್ತುಕೊಳ್ಳಬೇಕು’ ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.