ತುಮಕೂರು: ಬಾಲ ನ್ಯಾಯ ಕಾಯ್ದೆಯ ಅನುಸಾರ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ರಚಿಸಿ, ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಸೂಚಿಸಿದರು.
ನಗರ ಪೊಲೀಸ್ ಠಾಣೆಗೆ ಬುಧವಾರ ಭೇಟಿ ನೀಡಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಕಾರ್ಯವೈಖರಿ, ಬಾಲ ನ್ಯಾಯ ಕಾಯ್ದೆ, ಪೋಕ್ಸೊ ಕಾಯ್ದೆ ಜಾರಿ ಹಾಗೂ ದಾಖಲಾದ ಮಕ್ಕಳ ಪ್ರಕರಣಗಳನ್ನು ಪರಿಶೀಲಿಸಿದರು.
ಮಕ್ಕಳ ವಿಶೇಷ ಪೊಲೀಸ್ ಘಟಕಕ್ಕೆ ತರಬೇತಿ ಪಡೆದ ಅಧಿಕಾರಿ ನೇಮಕವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಠಾಣೆಗಳಲ್ಲಿ ಮಕ್ಕಳ ಪ್ರಕರಣಗಳ ದಾಖಲೆಯನ್ನು ಪ್ರತ್ಯೇಕವಾಗಿ ನಿರ್ವಹಣೆ ಮಾಡಬೇಕು. ಮಕ್ಕಳಿಗೆ ಪೊಲೀಸ್ ಇಲಾಖೆ ಪರಿಚಯಿಸಲು, ಹಕ್ಕುಗಳ ಬಗ್ಗೆ ತಿಳಿಸಿಕೊಡಲು ನಿಯಮಿತವಾಗಿ ‘ತೆರೆದ ಮನೆ’ ಕಾರ್ಯಕ್ರಮ ಆಯೋಜಿಸುವಂತೆ ನಿರ್ದೇಶಿಸಿದರು.
ನಗರ ಪ್ರದೇಶದಲ್ಲಿ ಮಕ್ಕಳು ಮಾದಕ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಪೋಕ್ಸೊ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿ. ಇಂತಹ ಪ್ರಕರಣಗಳನ್ನು ತಡೆಗಟ್ಟಲು ಪೊಲೀಸ್, ಮಕ್ಕಳ ರಕ್ಷಣಾ ಘಟಕ, ಅರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಮನ್ವಯದಿಂದ ಕೆಲಸಮಾಡಬೇಕು ಎಂದರು.
ಪೊಲೀಸ್ ಇನ್ಸ್ಪೆಕ್ಟರ್ ದಿನೇಶ್ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿನೇಶ್, ಪಿಎಸ್ಐ ಮಂಜುಳಾ, ಮಕ್ಕಳ ರಕ್ಷಣಾಧಿಕಾರಿ ಶಿವಣ್ಣ, ಗೌತಮ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.