ತುಮಕೂರು: ಆರೋಪಿಗಳ ಜತೆ ಸಂಪರ್ಕ, ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಆರೋಪದ ಮೇಲೆ ಹೊಸ ಬಡಾವಣೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಹ್ಮದ್ ಗನಿ, ಕ್ಯಾತ್ಸಂದ್ರ ಠಾಣೆಯ ಕಾನ್ಸ್ಟೇಬಲ್ ಕಿರಣ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಆದೇಶಿಸಿದ್ದಾರೆ.
ವ್ಯಾಪಾರಿಯೊಬ್ಬರಿಗೆ ಕೊಲೆ ಬೆದರಿಕೆ ಹಾಕಿ, ಹಲ್ಲೆ ನಡೆಸಿ, ₹40 ಸಾವಿರ ಹಣ ಕಿತ್ತುಕೊಂಡ ಆರೋಪದ ಮೇರೆಗೆ ಉದ್ಯಮಿ ಮಂಜುನಾಥರೆಡ್ಡಿ ಇತರರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಚಾರಣೆ ಸಮಯದಲ್ಲಿ ಮಂಜುನಾಥ್ರೆಡ್ಡಿಗೆ ಇಬ್ಬರು ಕಾನ್ಸ್ಟೇಬಲ್ ಜತೆ ಸಂಪರ್ಕ ಇರುವ ಮಾಹಿತಿ ಹೊರ ಬಂದಿದೆ. ಇದೇ ಆಧಾರದ ಮೇಲೆ ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಂಜುನಾಥ್ ರೆಡ್ಡಿ ವಿರುದ್ಧ ತಿಲಕ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೇ ಪ್ರಕರಣದಲ್ಲಿ ಜೂನ್ 10ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಿಬ್ಬಂದಿ ಸೇರಿ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.