ADVERTISEMENT

ಇಂದು ಜಿಲ್ಲೆಗೆ ಕೇಂದ್ರ ಸಚಿವ ಸೋಮಣ್ಣ ಭೇಟಿ

16ರಂದು ಕಾರ್ಯಕರ್ತರಿಗೆ ಧನ್ಯವಾದ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 13 ಜೂನ್ 2024, 18:34 IST
Last Updated 13 ಜೂನ್ 2024, 18:34 IST
ವಿ.ಸೋಮಣ್ಣ
ವಿ.ಸೋಮಣ್ಣ   

ತುಮಕೂರು: ಕೇಂದ್ರದ ಜಲಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಜೂನ್ 14ರಂದು ಜಿಲ್ಲೆಗೆ ಬರಲಿದ್ದು, ವಿವಿಧ ಮಠಗಳಿಗೆ ಭೇಟಿನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆಯಲಿದ್ದಾರೆ.

ಸಿದ್ಧಗಂಗಾ ಮಠ, ಬೆಳ್ಳಾವಿ ಕಾರದ ಮಠ, ಎಲೆರಾಂಪುರ, ಸಿದ್ಧರಬೆಟ್ಟ ಸೇರಿದಂತೆ ಜಿಲ್ಲೆಯ ವಿವಿಧ ಮಠಗಳಿಗೆ ಭೇಟಿ ನೀಡಲಿದ್ದಾರೆ. ಜೂನ್ 16ರಂದು ನಗರದ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ಕಾರ್ಯಕರ್ತರು ಮತ್ತು ಮತದಾರರಿಗೆ ಧನ್ಯವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಇಲ್ಲಿ ಗುರುವಾರ ಮಾಹಿತಿ ನೀಡಿದರು.

16ರಂದು ಎಸ್ಐಟಿ ಕಾಲೇಜು ಮುಂಭಾಗದಿಂದ ಕಲ್ಯಾಣ ಮಂಟಪದ ವರೆಗೆ ಮೆರವಣಿಗೆ ನಡೆಯಲಿದೆ. ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗುತ್ತದೆ. ಬೈಕ್‌ ರ್‍ಯಾಲಿ ಹಮ್ಮಿಕೊಂಡಿದ್ದು, ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

ಸೋಮಣ್ಣ ಅವರು ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ, ಗೋವಿಂದರಾಜ ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಇದೀಗ ರೈಲ್ವೆ ಸಚಿವರಾಗಿದ್ದು, ಜಿಲ್ಲೆಯ ರೈಲ್ವೆ ಕಾಮಗಾರಿಗಳಿಗೆ ವೇಗ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದರು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸಿ.ಆಂಜಿನಪ್ಪ, ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜ, ವಕ್ತಾರ ಮೆಡಿಕಲ್‌ ಮಧು, ಬಿಜೆಪಿ ಪದಾಧಿಕಾರಿಗಳಾದ ಕೆಂಪೇಗೌಡ, ಸಂದೀಪ್‌ಗೌಡ, ವಿಜಯಗೌಡ, ಜೆ.ಜಗದೀಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.