ಗುಬ್ಬಿ: ರಾಜ್ಯದ ಜಲಾಶಯಗಳಿಂದ ಕುಡಿಯುವ ನೀರು ಮತ್ತು ಕೃಷಿಗೆ ನೀರು ಬಳಸಿಕೊಳ್ಳುವ ಬಗ್ಗೆ ನ್ಯಾಯಾಲಯಗಳು ನೀಡಿರುವ ತೀರ್ಪುಗಳನ್ನು ಪ್ರಶ್ನಿಸದಿರುವುದರಿಂದಲೇ ರಾಜ್ಯಕ್ಕೆ ಸಾಕಷ್ಟು ಅನ್ಯಾಯವಾಗುತ್ತಿದೆ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ. ಕೃಷ್ಣಪ್ಪ ಅಭಿಪ್ರಾಯಪಟ್ಟರು.
ಪಟ್ಟಣದಲ್ಲಿ ಮಂಗಳವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.
ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ಹಾಗೂ ಕುಡಿಯುವ ನೀರಿನ ಹಂಚಿಕೆಯಲ್ಲಿ ಸಾಕಷ್ಟು ಅನ್ಯಾಯವಾಗಿದ್ದು ಅದನ್ನು ಪ್ರಶ್ನಿಸಲೇಬೇಕಿದೆ. ಈ ಹಿಂದೆ ಯಾವುದೊ ಸಂದರ್ಭದಲ್ಲಿ ನೀಡಿದ ತೀರ್ಪನ್ನೇ ಮುಂದುವರೆಸಿಕೊಂಡು ಹೋಗುವುದು ತರವಲ್ಲ. ಅದನ್ನು ಪರಾಮರ್ಶಿಸಿ ಹೊಸ ನಿಯಮಗಳನ್ನು ರೂಪಿಸಿಕೊಳ್ಳಬೇಕಿದೆ ಎಂದು ಹೇಳಿದರು.
ನೀರು ಹಂಚಿಕೆ ವಿಚಾರದಲ್ಲಿ ಅನ್ಯಾಯ ಪ್ರಶ್ನಿಸಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಕಾನೂನು ತಜ್ಞರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.
ನೀರಿನ ವಿಚಾರದಲ್ಲಿ ರಾಜ್ಯದ ಜನರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿ ಹಕ್ಕು ಮಂಡಿಸುತ್ತೇವೆ. ಅನೇಕ ವರ್ಷಗಳ ಹಿಂದೆ ಬೆಂಗಳೂರು ಮಹಾನಗರಕ್ಕೆ ನಿಗದಿಪಡಿಸಿದ್ದ ನೀರಿನ ಪ್ರಮಾಣ ಈಗ ಜನಸಂಖ್ಯೆ ಹೆಚ್ಚಾಗಿರುವುದರಿಂದ ಸಮಸ್ಯೆಯನ್ನು ತಂದೊಡ್ಡಿದೆ. ಈ ಬಗ್ಗೆ ವ್ಯವಸ್ಥಿತ ಯೋಜನೆ ರೂಪಿಸಬೇಕಿದೆ ಎಂದರು.
ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.