ADVERTISEMENT

ಗಂಗೊಳ್ಳಿ ಹೂಳು ಸಮಸ್ಯೆ: ಪರಿಹಾರಕ್ಕೆ ಆಗ್ರಹ

ಸಚಿವ ಮಂಕಾಳ ವೈದ್ಯ ಸೂಚನೆಯಂತೆ ಬಂದರಿಗೆ ಭೇಟಿ ನೀಡಿದ ಅಧಿಕಾರಿ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2024, 7:41 IST
Last Updated 20 ಅಕ್ಟೋಬರ್ 2024, 7:41 IST
ಕುಂದಾಪುರ ಸಮೀಪದ ಗಂಗೊಳ್ಳಿ ಮೀನುಗಾರಿಕೆ ಬಂದರು ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿ ಭಾನುಪ್ರಕಾಶ್ ಅವರು, ಬಂದರು ಹಾಗೂ ಅಳಿವೆ ಪ್ರದೇಶದ ವೀಕ್ಷಣೆ ಮಾಡಿ, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.
ಕುಂದಾಪುರ ಸಮೀಪದ ಗಂಗೊಳ್ಳಿ ಮೀನುಗಾರಿಕೆ ಬಂದರು ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ ಬಂದರು ಮತ್ತು ಮೀನುಗಾರಿಕೆ ಇಲಾಖೆಯ ಅಧಿಕಾರಿ ಭಾನುಪ್ರಕಾಶ್ ಅವರು, ಬಂದರು ಹಾಗೂ ಅಳಿವೆ ಪ್ರದೇಶದ ವೀಕ್ಷಣೆ ಮಾಡಿ, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.   

ಕುಂದಾಪುರ: ರಾಜ್ಯ ಬಂದರು ಹಾಗೂ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಅವರ ಸೂಚನೆ ಮೇರೆಗೆ ಗಂಗೊಳ್ಳಿ ಮೀನುಗಾರಿಕೆ ಬಂದರು ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿದ ಬಂದರು ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿ ಭಾನುಪ್ರಕಾಶ್, ಬಂದರು ಹಾಗೂ ಅಳಿವೆ ಪ್ರದೇಶ ವೀಕ್ಷಣೆ ಮಾಡಿದರು. ಅಳಿವೆಯಲ್ಲಿ ತುರ್ತು ಹೂಳೆತ್ತುವ ಕಾಮಗಾರಿ ಪ್ರಾರಂಭಿಸುವ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಗುರುವಾರ ಮಂಕಾಳ ವೈದ್ಯ ಅವರನ್ನು ಭಟ್ಕಳದ ಅವರ ನಿವಾಸದಲ್ಲಿ ಭೇಟಿ ಮಾಡಿದ್ದ ಗಂಗೊಳ್ಳಿಯ ಹಸಿ ಮೀನು ವ್ಯಾಪಾರಸ್ಥರ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ನಿಯೋಗ, ಗಂಗೊಳ್ಳಿ ಮೀನುಗಾರಿಕೆ ಬಂದರಿನಲ್ಲಿ, ಅಳಿವೆಯಲ್ಲಿ ತುರ್ತು ಹೂಳೆತ್ತುವ ಕಾರ್ಯ ನಡೆಸುವಂತೆ ಆಗ್ರಹಿಸಿದ್ದರು. ಮೀನುಗಾರರ ಬೇಡಿಕೆಗಳಿಗೆ ಸ್ಪಂದಿಸಿದ ಸಚಿವರು, ಹೂಳೆತ್ತುವ ಬಗ್ಗೆ ಇಲಾಖೆ ಅಧಿಕಾರಿಗಳ ಮೂಲಕ ವರದಿ ತರಿಸಿಕೊಂಡು, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಭೇಟಿ ನೀಡಿದರು.

ಕಳೆದ ನವೆಂಬರ್‌ನಲ್ಲಿ ₹4.6 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಅಳಿವೆ, ಜೆಟ್ಟಿ ಪ್ರದೇಶದಲ್ಲಿನ ಹೂಳೆತ್ತುವ ಕಾಮಗಾರಿ ಸಮರ್ಪಕವಾಗಿ ನಡೆದಿಲ್ಲ. ಮೀನುಗಾರರ ನಿರೀಕ್ಷೆಗೆ ತಕ್ಕಂತೆ ಡ್ರಜ್ಜಿಂಗ್ ಕಾಮಗಾರಿಯೂ ನಡೆದಿಲ್ಲ. ಗಂಗೊಳ್ಳಿ ಬಂದರಿಗೆ ಬರುವ ದಾರಿಯಲ್ಲಿ ಡ್ರಜ್ಜಿಂಗ್ ಮಾಡುವುದು ಬಿಟ್ಟು ಕೋಡಿಗೆ ಹೋಗುವ ದಾರಿಯಲ್ಲಿ ಡ್ರಜ್ಜಿಂಗ್ ಮಾಡಲಾಗಿದೆ ಎಂದು ಸ್ಥಳೀಯ ಮೀನುಗಾರರು ಆಕ್ಷೇಪ ವ್ಯಕ್ತಪಡಿಸಿದ್ದರು.

ADVERTISEMENT

ಗಂಗೊಳ್ಳಿ ಅಳಿವೆಯಲ್ಲಿ ಹಿಟಾಚಿ ಮೂಲಕ ತೆಗೆಯುವ ಹೂಳನ್ನು, ಬಾರ್ಜ್ ಮೂಲಕ ಅಳಿವೆಯಿಂದ ಸ್ವಲ್ಪ ದೂರದಲ್ಲಿ ಹಾಕಿರುವುದರಿಂದ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ. ಅಳಿವೆಯಲ್ಲಿ ತೆಗೆದ ಹೂಳನ್ನು ಗಂಗೊಳ್ಳಿ ಬಂದರಿಗೆ ಬರುವ ದಾರಿಯುದ್ದಕ್ಕೂ ಹಾಕುತ್ತಾ ಹೋಗಿರುವುದರಿಂದ ಅಲ್ಲಲ್ಲಿ ಮರಳು ದಿಬ್ಬ ಸೃಷ್ಟಿಯಾಗಿವೆ. ಇದರಿಂದ ಪರ್ಸಿನ್, ಮೀನುಗಾರಿಕ ಬೋಟುಗಳು, ದೋಣಿಗಳಿಗೆ ಬಂದರು ಪ್ರವೇಶಿಸಲು ಕಷ್ಟವಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ಅಳಿವೆಯಲ್ಲಿ ಅನಾಹುತವಾಗುವ ಸಾಧ್ಯತೆಗಳಿವೆ. ಮೀನುಗಾರರಿಗೆ, ಮೀನುಗಾರಿಕೆಗೆ ಕಂಟಕವಾಗಿ ಪರಿಣಮಿಸುತ್ತಿರುವ ಗಂಗೊಳ್ಳಿ– ಕೋಡಿ ಅಳಿವೆ ಪ್ರದೇಶದಲ್ಲಿ ತುಂಬಿರುವ ಹೂಳನ್ನು ಎತ್ತಲು ಕ್ರಮ ಕೈಗೊಳ್ಳುವಂತೆ ಸಚಿವರನ್ನು ಒತ್ತಾಯಿಸಲಾಯಿತು.

ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಮೀನುಗಾರ ಮುಖಂಡರಾದ ರಾಮಪ್ಪ ಖಾರ್ವಿ, ರಾಘವೇಂದ್ರ ಖಾರ್ವಿ ಮುಂತಾದವರು ನಿಯೋಗದಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.