ADVERTISEMENT

ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ವೇದಿಕೆ

ಬೈಂದೂರು: ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ಅಭಿಮತ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 6:50 IST
Last Updated 11 ಜುಲೈ 2024, 6:50 IST
ಜನಸ್ಪಂದನ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ಶಾಸಕರು ಜನರ ಸಮಸ್ಯೆ ಆಲಿಸಿದರು
ಜನಸ್ಪಂದನ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ಶಾಸಕರು ಜನರ ಸಮಸ್ಯೆ ಆಲಿಸಿದರು   

ಬೈಂದೂರು: ಜನ ಸಾಮಾನ್ಯರಿಗೆ ತಮ್ಮ ಸಮಸೈಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಲು ಜನಸ್ಪಂದನ ಕಾರ್ಯಕ್ರಮ ಉತ್ತಮ ಅವಕಾಶವಾಗಿದೆ ಇದನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಬೈಂದೂರು ತಾಲ್ಲೂಕು ಆಡಳಿತ ಸೌಧದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಡೆದ ಬೈಂದೂರು ತಾಲ್ಲೂಕು ಮಟ್ಟದ ಜನಸ್ಪಂದನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನ ನಾಮಾನ್ಯರು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಹಲವು ವರ್ಷಗಳಿಂದ ಕಚೇರಿ ಅಲೆದಾಡಿದರು ಬಗೆಹರಿದಿಲ್ಲ, ಇಂತಹ ಸಮಸ್ಯೆಗಳನ್ನು ಜನಸ್ಪಂದನ ಕಾರ್ಯಕ್ರಮದಲ್ಲಿ ಪರಿಹರಿಸಿಕೊಳ್ಳಲು ಉತ್ತಮ ಅವಕಾಶವಿದೆ,  ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸೇರಿದಂತೆ ಜಿಲ್ಲಾಧಿಕಾರಿಗಳು ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ವಿವಿಧ ಇಲಾಖೆಯ ಸಮನ್ವಯದೊಂದಿಗೆ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಲು ಒಂದು ಅವಕಾಶವಾಗಿದೆ ಎಂದು ಹೇಳಿದರು.

ADVERTISEMENT

ಕಳೆದ ಬೈಂದೂರು ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ 160 ಕ್ಕೂ ಹೆಚ್ಚು ಅಹವಾಲುಗಳನ್ನು ಜನರು ಸಲ್ಲಿಸಿದ್ದರು ಅವುಗಳಲ್ಲಿ ಶೇ 90 ರಷ್ಟು ವಿಲೇವಾರಿಯಾಗಿವೆಎಂದರು.

ನೆರೆಗೆ ಮಳೆಯೊಂದೇ ಕಾರಣವಲ್ಲ, ಸಾಮಾನ್ಯವಾಗಿ ಅಧಿಕಾರಿಗಳು ಮಳೆಗೆ ಕಾರಣವೆನ್ನುತ್ತಾರೆ ಆದರೆ ವಾಸ್ತವವಾಗಿ ಮನುಷ್ಯನೇ ಇದಕ್ಕೆ ಕಾರಣ ಹೊಳೆ ಹಾಗೂ ನೀರು ಹರಿಯುವ ತೋಡುಗಳ ಅತಿಕ್ರಮಣದಿಂದ ಹಲವು ಪ್ರದೇಶಗಳಲ್ಲಿ ನೆರೆ ಸೃಷ್ಟಿಯಾಗುತ್ತದೆ. ಇದರಿಂದ ಸಾರ್ವಜನಿಕರು ಅನೇಕ ಸಮಸ್ಯೆಗಳನ್ನು ಎದುರಿಸಿಕೊಂಡು ಬರುತ್ತಿದ್ದು, ನೆರೆ ಪರಿಹಾರಕ್ಕಾಗಿ ಶೀಘ್ರದಲ್ಲೇ ಕ್ರಮ ಕೈಗೊಳ್ಳಬೇಕು ಹಾಗೂ ಮಳೆಗಾಲ ಮುಗಿದ ನಂತರ ಭವಿಷ್ಯದಲ್ಲಿ ನೆರೆ ಸಂಭವಿಸದಂತೆ ಪರಿಹಾರ ಕಂಡುಕೊಳ್ಳಲು ಚರ್ಚಿಸಿ ಬಗೆಹರಿಸುವ ಅವಶ್ಯಕತೆ ಇದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಮಾತನಾಡಿ, ವಿವಿಧ ಸೇವೆ ಹಾಗೂ ಸವಲತ್ತುಗಳಿಗೆ ಸಾರ್ವಜನಿಕರು ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಸರ್ಕಾರದ ಎಲ್ಲಾ ಸವಲತ್ತುಗಳನ್ನು ಜನಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸಾರ್ವಜನಿಕರು ಜನಸ್ಪಂದನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಮಟ್ಟದಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳಿಗೆ ಸ್ಥಳದಲ್ಲೇ ಕ್ರಮ ಕೈಗೊಳ್ಳಲಾಗುವುದು, ಅನುದಾನ ಬಿಡುಗಡೆ ಹಾಗೂ ಇನ್ನಿತರ ರಾಜ್ಯ ಮಟ್ಟದಲ್ಲಿ ಬಗೆಹರಿಯುವಂತಹ ಸಮಸ್ಯೆಗಳ ಅರ್ಜಿಗಳು ಸ್ಪೀಕೃತಗೊಂಡರೆ ಅಂತಹ ಸಮಸ್ಯೆಗಳ ಪ್ರಸ್ತಾವನೆಯನ್ನು  ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದರು.

ಪಿಂಚಣೆ ಯೋಜನೆ, ಅಪಾಯಕಾರಿ ಮರ ತೆರವು, ರಸ್ತೆ ದುರಸ್ತಿ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಮುಕ್ತವಾಗಿ ಹೇಳುವುದರ ಮೂಲಕ ಸಮಸ್ಯೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳ ಸಮ್ಮುಖದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದ ಅವರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವುದರೊಂದಿಗೆ ಪ್ರತಿಯೊಬ್ಬರಿಗೂ ಜನಸ್ಪಂದನದ ಕುರಿತು ಮಾಹಿತಿ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಸಹಾಯಕ ಆಯುಕ್ತೆ ರಶ್ಮಿ, ಬೈಂದೂರು ತಹಶೀಲ್ದಾರ್ ಪ್ರದೀಪ್ ಆರ್., ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭಾರತಿ ಎನ್. ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಕಾರ್ಯಕ್ರಮದಲ್ಲಿ 147 ಅರ್ಜಿಗಳು ಸ್ವೀಕೃತವಾಗಿದ್ದು, ರಸ್ತೆ, ಮನೆ, ಜಮೀನು, ಒಳಚರಂಡಿ, ನೀರಿನ ಸೌಲಭ್ಯ, ವಿದ್ಯುತ್, ಹಕ್ಕುಪತ್ರ, ಕೆರೆ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದ ಹಲವು ಅಹವಾಲುಗಳು ಸಲ್ಲಿಕೆಯಾಗಿದ್ದವು.

ಡಿಡಿಎಲ್‌ಆರ್ ರವೀಂದ್ರ, ಬೈಂದೂರು ವೃತ್ತ ನಿರೀಕ್ಷಕ ಸವಿತ್ರ ತೇಜ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಜಯ್ ಭಂಡಾರ್‌ಕರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಶಿಕ್ಷಕರಾದ ಗಣಪತಿ ಹೋಬಳಿದಾರ್ ಸ್ವಾಗತಿಸಿ, ರಾಮಕೃಷ್ಣ ದೇವಾಡಿಗ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ಕೆ. ನಾಯ್ಕ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.