ಕಾಡೂರು (ಬ್ರಹ್ಮಾವರ): ಡೆಂಗಿ ಜ್ವರ ನಿಯಂತ್ರಣಕ್ಕೆ ಆಶಾ ಕಾರ್ಯಕರ್ತರ ಮೂಲಕ ಮನೆ ಭೇಟಿ, ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕಾಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಲಂಧರ್ ಶೆಟ್ಟಿ ಹೇಳಿದರು.
ಕಾಡೂರು ಗ್ರಾಮ ಪಂಚಾಯಿತಿಯಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮನೆಯ ಸುತ್ತ ನೀರು ನಿಲ್ಲದಂತೆ ಜಾಗೃತಿ ವಹಿಸುವುದರೊಂದಿಗೆ ಡ್ರೈಡೆ ಪರಿಕಲ್ಪನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದಲ್ಲಿ ಡೆಂಗಿ ನಿಯಂತ್ರಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಕಂದಾಯ ಇಲಾಖೆ ಮೂಲಕ ಪಹಣಿಪತ್ರಕ್ಕೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಜಾರಿಯಲ್ಲಿದ್ದು, ಈ ಬಗ್ಗೆ ನಾಗರಿಕರಿಗೆ ಇನ್ನಷ್ಟು ಮಾಹಿತಿ ನೀಡಬೇಕು ಎಂದು ತಿಳಿಸಿದ ಅವರು, 94ಸಿ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ನೀಡುವ ಪ್ರಕ್ರಿಯೆ ಚುರುಕುಗೊಳಿಸಬೇಕು. ಪಂಚಾಯಿತಿ ವ್ಯಾಪ್ತಿಯಲ್ಲಿ ಅಪೌಷ್ಟಿಕತೆ ಹೊಂದಿರುವ 3 ಮಕ್ಕಳನ್ನು ಗುರುತಿಸಲಾಗಿದ್ದು, ಇಲಾಖೆ, ದಾನಿಗಳ ಸಹಕಾರದೊಂದಿಗೆ ಪೌಷ್ಟಿಕ ಕಿಟ್ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಶಿಕ್ಷಣ ಸಂಯೋಜಕ ರಾಘವ ಶೆಟ್ಟಿ ಮಾಹಿತಿ ನೀಡಿ, ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲೆಗಳಲ್ಲಿ ಸುರಕ್ಷತಾ ಸಮಿತಿಗಳ ಸಭೆ ನಡೆಸಲಾಗಿದ್ದು, ತಂತ್ರಾಡಿ ಶಾಲೆಯ ಕಟ್ಟಡ ದುರಸ್ತಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಪಿಎಂಶ್ರೀ ಯೋಜನೆಯಡಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಅವಕಾಶವಿದ್ದು, ಉನ್ನತೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಮಾಹಿತಿ ನೀಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ ಕೆ. ಅವರು ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನ ಮಾಡಲಾಗಿರುವ ಕಾಮಗಾರಿ, ಕಾರ್ಯ ಚಟುವಟಿಕೆಗಳ ವಿವರ ಮಂಡಿಸಿದರು. ಈ ಕುರಿತಂತೆ ವಿಸ್ತೃತ ವಿವರ ಇಲಾಖಾಧಿಕಾರಿಗಳಿಂದ ಪಡೆಯಲಾಯಿತು.
ಶಿಕ್ಷಣ ಇಲಾಖೆಯ ಉದಯ ಕೋಟ, ಸಾಮಾಜಿಕ ಅರಣ್ಯ ವಿಭಾಗದ ಅವುಡಪ್ಪ ಬಿರಾದಾರ್, ಪಶುಪಾಲನಾ ಇಲಾಖೆಯ ಪುರುಷೋತ್ತಮ, ಮೆಸ್ಕಾಂ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಗ್ರಂಥಾಲಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.