ಕಾರ್ಕಳ: ತಾಲ್ಲೂಕಿನ ಕುಕ್ಕುಂದೂರು ಗ್ರಾಮದ ಬಿಜೆಪಿ ಕಾರ್ಯಕರ್ತರ ಸಭೆ ವಿಕಾಸ ಕಚೇರಿಯಲ್ಲಿ ಶನಿವಾರ ನಡೆಯಿತು.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಆಯ್ಕೆ ಮಾಡಿ ಜವಾಬ್ದಾರಿ ಹಂಚಲಾಯಿತು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ ಮಾತನಾಡಿ, ಏ. 3ರಂದು ಉಡುಪಿ - ಚಿಕ್ಕಮಗಳೂರು ಲೋಕಸಭಾ ಚುನಾವಣಾ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರ ನಾಮಪತ್ರಿಕೆ ಸಲ್ಲಿಕೆ ಕಾರ್ಯಕ್ರಮದಲ್ಲಿ ಕಾರ್ಕಳದಿಂದ ಕಾರ್ಯಕರ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
5ರಂದು ಮಂಜುನಾಥ ಪೈ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶಕ್ಕೆ ಪ್ರತಿ ಬೂತ್ನಿಂದ 25 ಮಂದಿಯನ್ನು ಕರೆತರಬೇಕು ಎಂದು ನಿರ್ಧರಿಸಲಾಯಿತು.
ಜಿಲ್ಲಾ ವಕ್ತಾರ ಸತೀಶ್ ಶೆಟ್ಟಿ ಮುಟ್ಲುಪಾಡಿ ಚುನಾವಣೆ ಯಾವ ರೀತಿಯಲ್ಲಿ ಎದುರಿಸಬೇಕು, ಪ್ರಚಾರ ಕಾರ್ಯ ಯಾವ ರೀತಿಯಲ್ಲಿ ಮಾಡಬೇಕು, ನರೇಂದ್ರ ಮೋದಿ ಅವರ ಯೋಜನೆಗಳ ಮಾಹಿತಿಯನ್ನು ಯಾವ ರೀತಿ ನೀಡಬೇಕು ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಸಾಲ್ಯಾನ್, ಕಾರ್ಯದರ್ಶಿ ಉದಯ ಎಸ್. ಕೋಟ್ಯಾನ್, ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಮಾಲಿನಿ ಜೆ.ಶೆಟ್ಟಿ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಸಾಲ್ಯಾನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.