ADVERTISEMENT

‘ಮಳೆ: ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ’

​ಪ್ರಜಾವಾಣಿ ವಾರ್ತೆ
Published 10 ಜುಲೈ 2024, 6:33 IST
Last Updated 10 ಜುಲೈ 2024, 6:33 IST
ಲಕ್ಷ್ಮಿ ಹೆಬ್ಬಾಳಕರ್
ಲಕ್ಷ್ಮಿ ಹೆಬ್ಬಾಳಕರ್   

ಉಡುಪಿ: ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಯಾವುದೇ ಅನಾಹುತಗಳು ಸಂಭವಿಸದಂತೆ ಜಿಲ್ಲಾಡಳಿತ ವತಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಉಡುಪಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಮಳೆಗಾಲಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಜೊತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಕಡಿಯಬೇಕು ಎಂದು ಸೂಚಿಸಲಾಗಿತ್ತು. ಬೀಳುವ ಹಂತದಲ್ಲಿದ್ದ ಸುಮಾರು 400 ಮರಗಳನ್ನು ಕಡಿಯಲಾಗಿದ್ದು, 80 ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು.

ಕೆಲವೊಂದು ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು, ಈ ಪ್ರದೇಶದಿಂದ ಜನರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಕಳೆದ ವರ್ಷ ಮಳೆಯಿಂದಾಗಿ ಎದುರಿಸಿದ್ದ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ‌ ಎಚ್ಚರಿಕೆ ವಹಿಸಲಾಗಿದೆ. ಗುಡ್ಡ ಕುಸಿತದಿಂದ ಕೆಲವು ಮನೆಗಳಿಗೆ ಹಾನಿ‌ ಉಂಟಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ತ್ವರಿತಗತಿಯಲ್ಲಿ ಪರಿಹಾರ ನೀಡಲು ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.

ADVERTISEMENT

ಉಡುಪಿ ನಗರದಲ್ಲಿ ಯುಜಿಡಿ ವ್ಯವಸ್ಥೆ ಇಲ್ಲ. ಹೀಗಾಗಿ ಮಳೆ ಬಂದರೆ ರಸ್ತೆಯ ಮೇಲೆ ನೀರು ನಿಲ್ಲುತ್ತದೆ. ನಾನು ಉಸ್ತುವಾರಿ ಸಚಿವೆಯಾದ ನಂತರದಲ್ಲಿ ಒಳಚರಂಡಿ ನಿರ್ಮಿಸಲು ನಿರ್ಧರಿಸಲಾಗಿದ್ದು, ಒಂದೆರಡು ವಾರಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ. ನಿನ್ನೆ ಹೆಚ್ಚು ಮಳೆಯಾದ ಕಾರಣ ಇಂದು ಶಾಲಾ‌, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.