ಉಡುಪಿ: ನಗರಸಭಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಮಳೆಗಾಲದಲ್ಲಿ ಹರಡಬಹುದಾದ ಮಲೇರಿಯಾ, ಫೈಲೇರಿಯಾ, ಡೆಂಗಿ, ಚಿಕುನ್ ಗುನ್ಯಾ ಮೊದಲಾದ ಸಾಂಕ್ರಾಮಿಕ ರೋಗಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಬಿಲ್ಡರ್ಸ್ ಅಸೋಸಿಯೇಷನ್ ಮತ್ತು ನಗರಸಭೆಯ ಆರೋಗ್ಯ ವಿಭಾಗದ ಅಧಿಕಾರಿಗಳ ಸಭೆ ಈಚೆಗೆ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಮಾತನಾಡಿ, ಮಳೆಗಾಲದಲ್ಲಿ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದ್ದು, ಈ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳುವ ಉದ್ದೇಶದಿಂದ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಸುತ್ತ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು ಎಂದರು.
ಕೆಲಸಗಳಿಗೆ ಹೊರ ಜಿಲ್ಲೆ ಹಾಗೂ ಇತರ ಕಡೆಗಳಿಂದ ಬರುವ ಕಾರ್ಮಿಕರಿಗೆ ಕಡ್ಡಾಯವಾಗಿ ರಕ್ತ ಪರೀಕ್ಷೆ ಮಾಡಿಸಿ ಅವರ ಮಾಹಿತಿಯನ್ನು ಜಿಲ್ಲಾಸ್ಪತ್ರೆಗೆ ನೀಡಬೇಕು. ಕಟ್ಟಡ ನಿರ್ಮಾಣ ಸ್ಥಳದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಿ ರೋಗ ಹರಡುವಿಕೆಗೆ ಕಾರಣವಾಗುವ ಅಂಶಗಳ ಬಗ್ಗೆ ಮುಂಜಾಗ್ರತೆ ವಹಿಸಬೇಕು. ಯಾವುದೇ ಜ್ವರ ಅಥವಾ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಹತ್ತಿರದ ವೈದ್ಯರನ್ನು ಸಂಪರ್ಕಿಸಬೇಕು ಎಂದರು.
ಸಭೆಯಲ್ಲಿ ಪೌರಾಯುಕ್ತ ರಾಯಪ್ಪ ಮಾತನಾಡಿ, ಯಾವುದೇ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚು ಕಂಡು ಬಂದಲ್ಲಿ ದಕ್ಕೆ ಕಾರಣರಾದ ಬಿಲ್ಡರ್ಸ್ಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದ ಎಂದು ಸೂಚನೆ ನೀಡಿದರು.
ನಗರಸಭೆಯ ಪರಿಸರ ಎಂಜಿನಿಯರ್ ಸ್ನೇಹ ಕೆ.ಎಸ್, ಪ್ರಭಾರ ಆರೋಗ್ಯ ನಿರೀಕ್ಷಕ ಮನೋಹರ್, ಸುರೇಂದ್ರ ಹೋಬಳಿದಾರ್, ಹರೀಶ್ ಬಿಲ್ಲವ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.