ಉಡುಪಿ: ಸೋಲು ಗೆಲುವಿನ ಕುರಿತು ಯೋಚಿಸದೇ ಕ್ರೀಡಾಕೂಟದಲ್ಲಿ ಸಕ್ರಿಯವಾಗಿ ಭಾಗವಹಿಸುವುದರೊಂದಿಗೆ ಕ್ರೀಡಾಪಟುಗಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹೇಳಿದರು.
ನಗರದ ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಹಮ್ಮಕೊಂಡಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ದಸರಾ ಕ್ರೀಡಾಕೂಟ ಎಂಬುದು ನಾಡಿನ ಹೆಮ್ಮೆಯ ಕ್ರೀಡಾಕೂಟ. ಅದರಲ್ಲಿ ಪಾಲ್ಗೊಳ್ಳುವುದು ಗೌರವದ ವಿಚಾರವಾಗಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ರಾಜ್ಯ ಮಟ್ಟದಲ್ಲಿ ಭಾಗವಹಿಸುವ ಅವಕಾಶವಿದೆ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕ್ರೀಡಾಪಟುಗಳು ಸತತ ಅಭ್ಯಾಸದಿಂದ ಕ್ರೀಡೆಯಲ್ಲಿ ಸಾಧನೆ ಮಾಡಬೇಕು ಎಂದರು.
ಅಜ್ಜರಕಾಡುವಿನ ಒಳಾಂಗಣ ಕ್ರೀಡಾಂಗಣದಲ್ಲಿ ಟೇಬಲ್ ಟೆನಿಸ್, ಶಟ್ಲ್ ಬ್ಯಾಡ್ಮಿಂಟನ್, ಅಜ್ಜರಕಾಡುವಿನ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್ ಹಾಗೂ ಕಬ್ಬಡಿ, ಸಿಸಿಲಿ ಪ್ರೌಢ ಶಾಲೆಯಲ್ಲಿ ಥ್ರೋಬಾಲ್, ಮಣಿಪಾಲದ ಎಂ.ಜೆ.ಸಿಯಲ್ಲಿ ಫುಟ್ಬಾಲ್ ಟೂರ್ನಿ ಹಾಗೂ ಬ್ರಹ್ಮಾವರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಕ್ರೀಡಾಕೂಟ ಜರುಗಿತು.
ಪೌರಯುಕ್ತ ರಾಯಪ್ಪ, ಅಥ್ಲೆಟಿಕ್ಸ್ ತರಬೇತುದಾರ ಅನಂತ್ರಾಮ್, ವಾಲಿಬಾಲ್ ತರಬೇತುದಾರ ರಾಜೇಶ್ ಪತ್ತರ್, ಬ್ರಹ್ಮಾವರ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್, ಉಡುಪಿ ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ರವೀಂದ್ರ ನಾಯಕ್, ತಾಲ್ಲೂಕು ಕ್ರೀಡಾಧಿಕಾರಿ ವಸಂತ್ ಜೋಗಿ ಇದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.