ಭಟ್ಕಳ: ತಾಲ್ಲೂಕು ಆಸ್ಪತ್ರೆಯ ಸಭಾಗೃಹದಲ್ಲಿ ಬುಧವಾರ ಸಚಿವ ಮಂಕಾಳ ವೈದ್ಯ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಆಸ್ಪತ್ರೆ ರಕ್ಷಾ ಸಮಿತಿಯ ಸಾಮಾನ್ಯ ಸಭೆ ನಡೆಯಿತು.
ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಸವಿತಾ ಕಾಮತ ಮಾತನಾಡಿ, ಆಸ್ಪತ್ರೆಯ ಖರ್ಚು ವೆಚ್ಚಗಳ ವರದಿ ವಿವರಿಸಿ, ₹1.46 ಕೋಟಿ ಆಯುಷ್ಮಾನ್ನಲ್ಲಿ ಜಮೆ ಆಗಿದ್ದು, ₹1.38 ಕೋಟಿ ಖರ್ಚಾಗಿದೆ. ಸುಮಾರು ₹8 ಲಕ್ಷ ಉಳಿದಿದೆ’ ಎಂದರು.
‘ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳ ವಾಹನ ನಿಲುಗಡೆಗೆ ತೊಂದರೆಯಾಗುತ್ತಿದೆ. ಬ್ಲಡ್ ಬ್ಯಾಂಕ್ ಸಿಬ್ಬಂದಿ ಕೊರತೆಯಿದೆ. ಆಸ್ಪತ್ರೆಯಲ್ಲಿ ಬರುವ ರೋಗಿಗಳಿಗೆ ಅಗತ್ಯವಿರುವ ಬೆಡ್ ಒದಗಿಸುವುದು ಕಷ್ಟವಾಗುತ್ತಿದೆ’ ಎಂದು ತಿಳಿಸಿದರು.
ಸಚಿವ ಮಂಕಾಳ ವೈದ್ಯ ಮಾತನಾಡಿ, ‘ಸರ್ಕಾರದಿಂದ ಸಾಧ್ಯವಾದಷ್ಟು ಅನುದಾನ ತರಲು ಪ್ರಯತ್ನಿಸುವೆ. ಹೊರ ಗುತ್ತಿಗೆ ನೌಕರರ ಸಂಬಳ ಹೆಚ್ಚಳ ಮಾಡುವ ಚಿಂತನೆ ಇದೆ. 250 ಹಾಸಿಗೆಗಳ ಆಸ್ಪತ್ರೆ ಮಾಡಲು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಸರ್ಕಾರದಿಂದ ಮಂಜೂರಿ ಮಾಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಪ್ರಯತ್ನ ಮುಂದುವರಿದಿದ್ದು ಶೀಘ್ರದಲ್ಲಿಯೇ ಮಂಜೂರಿಯಾಗಲಿದೆ ಎನ್ನುವ ಭರವಸೆ ಇದೆ’ ಎಂದರು.
ತಾಲ್ಲೂಕು ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.