ಕಾರವಾರ: ತಾಲ್ಲೂಕಿನ ಮಾಜಾಳಿ ಚೆಕ್ಪೋಸ್ಟ್ನಲ್ಲಿ ಅ.15ರಂದು ಲಾರಿ ಚಾಲಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿದ್ದ ಅಬಕಾರಿ ಇಲಾಖೆಯ ಇನ್ಸ್ಪೆಕ್ಟರ್ ಸದಾಶಿವ ಕೋರ್ತಿ ಮತ್ತು ಅಬಕಾರಿ ಪೇದೆ ಹೇಮಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.
ಸದಾಶಿವ ಕೋರ್ತಿ ಅವರನ್ನು ಹಾಸನ ಜಿಲ್ಲೆಯ ಅಬಕಾರಿ ಉಪ ಅಧೀಕ್ಷಕರ ಕಚೇರಿಗೆ ಮತ್ತು ಹೇಮಚಂದ್ರ ಅವರನ್ನು ರಾಯಚೂರು ಜಿಲ್ಲೆ ಸಿಂಧನೂರಿನ ಕೆ.ಎಸ್.ಬಿ.ಸಿ.ಎಲ್ ಡಿಪೊದ ಅಬಕಾರಿ ನಿರೀಕ್ಷಕರ ಕಚೇರಿಗೆ ವರ್ಗಾವಣೆಗೊಳಿಸಿ ಇಲಾಖೆಯ ಆಯುಕ್ತರು ಶನಿವಾರ ಆದೇಶ ಹೊರಡಿಸಿದ್ದಾರೆ.
‘ಚಾಲಕನ ಮೇಲೆ ಹಲ್ಲೆ ನಡೆಸಿದ ಕಾರಣಕ್ಕೆ ಪೊಲೀಸ್ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿದ್ದ ಸ್ಥಳದಿಂದ ಬಿಡುಗಡೆಗೊಳಿಸಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಲಾರಿ ಚಾಲಕ ಎ.ಆರ್.ಕುಮಾರ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದ ಆರೋಪ ಹೊತ್ತಿರುವ ಅಧಿಕಾರಿ, ನೌಕರನ ವಿರುದ್ಧ ಶಿಸ್ತುಕ್ರಮ ಜರುಗಿಸದಿದ್ದರೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವುದಾಗಿ ಸರಕು ಸಾಗಣೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಮಾಧವ ನಾಯಕ ಎಚ್ಚರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.