ADVERTISEMENT

ಶಿರಸಿ: ನಿವೃತ್ತ ಸರ್ಕಾರಿ ನೌಕರರಿಗೆ ಅನ್ಯಾಯ ಆರೋಪ

7ನೇ ವೇತನ ಆಯೋಗ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2024, 16:07 IST
Last Updated 4 ಸೆಪ್ಟೆಂಬರ್ 2024, 16:07 IST
ನಿವೃತ್ತ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶಿರಸಿಯ ನಿವೃತ್ತ ನೌಕರರ ವೇದಿಕೆಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
ನಿವೃತ್ತ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶಿರಸಿಯ ನಿವೃತ್ತ ನೌಕರರ ವೇದಿಕೆಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು   

ಶಿರಸಿ: ರಾಜ್ಯ ಸರ್ಕಾರ ಜಾರಿಗೊಳಿಸಿದ 7ನೇ ವೇತನ ಆಯೋಗದಲ್ಲಿ ನಿವೃತ್ತ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳಿಗೆ ಅನ್ಯಾಯವಾಗಿದ್ದು, ಪರಿಷ್ಕೃತ ವೇತನಕ್ಕೆ ಅನುಗುಣವಾಗಿ ನಿವೃತ್ತಿ ಉಪಧನ, ಪಿಂಚಣಿ ಮತ್ತು ಗಳಿಕೆ ರಜೆಯ ನಗದೀಕರಣದ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿ ಇಲ್ಲಿನ ನಿವೃತ್ತ ನೌಕರರ ವೇದಿಕೆಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. 

ವೇದಿಕೆಯ ಸದಸ್ಯರು ಬುಧವಾರ ಉಪವಿಭಾಗಾಧಿಕಾರಿ ಕಚೇರಿ ಮೂಲಕ ಮನವಿ ಸಲ್ಲಿಸಿ, ‘7ನೇ ವೇತನ ಆಯೋಗದ ವರದಿ 2022ರ ಜುಲೈಗೆ ಪೂರ್ವಾನ್ವಯವಾಗುವಂತೆ ಅಂಗೀಕರಿಸಬೇಕಿತ್ತು. ಆದರೆ, ಸರ್ಕಾರ ಈ ಶಿಫಾರಸನ್ನು ಪರಿಗಣಿಸಿಲ್ಲ. 2022ರ ಜುಲೈನಿಂದ 2024ರ ಜುಲೈ ವರೆಗಿನ ಅವಧಿಯಲ್ಲಿ ನಿವೃತ್ತಿ ಹೊಂದಿದ ನೌಕರರಿಗೆ ಈ ಸೌಲಭ್ಯ ಅನ್ವಯವಾಗಿಲ್ಲ. ಈ ಅವಧಿಯಲ್ಲಿ ನಿವೃತ್ತಿ ಹೊಂದಿದ ನೌಕರರಿಗೆ ಅನ್ಯಾಯವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ನಿವೃತ್ತಿ ಉಪಧನ, ಪಿಂಚಣಿ ಸೇರಿ ಇತರ ಸೌಲಭ್ಯಗಳನ್ನು 6ನೇ ವೇತನಕ್ಕೆ ಅನುಗುಣವಾಗಿ ಒದಗಿಸಲಾಗುತ್ತಿದೆ. 70 ವರ್ಷ ದಾಟಿದ ನೌಕರರ ವೇತನ ಶೇ 10ರಷ್ಟು ಏರಿಕೆಯಾಗಬೇಕು. ವೈದ್ಯಕೀಯ ಸೌಲಭ್ಯ ವಿಸ್ತರಿಸಬೇಕು ಎಂಬ ಆಯೋಗದ ಶಿಫಾರಸನ್ನು ಸರ್ಕಾರ ನಿರ್ಲಕ್ಷಿಸಿದೆ. ನಿವೃತ್ತಿಯ ಅಂಚಿನಲ್ಲಿರುವ ನೌಕರರು ಹಾಗೂ ಅಧಿಕಾರಿಗಳಿಗೂ ಅನ್ಯಾಯವಾಗಲಿದೆ. ಈ ಕುರಿತು ರಾಜ್ಯ ಸರ್ಕಾರ ಹಾಗೂ ಸರ್ಕಾರಿ ನೌಕರರ ಸಂಘ ಗಂಭೀರವಾಗಿ ಆಲೋಚಿಸಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಲಾಯಿತು.

ADVERTISEMENT

ನಿವೃತ್ತ ನೌಕರರ ವೇದಿಕೆಯ ಜಿಲ್ಲಾ ಘಟಕದ ಸಂಚಾಲಕ ಬಿ.ಡಿ.ನಾಯ್ಕ, ಸಹ ಸಂಚಾಲಕ ವಿ‌.ಎಂ. ಭಟ್, ಪ್ರಮುಖರಾದ ಹರಿಹರ ಹೆಗಡೆ, ನಾರಾಯಣ ನಾಯ್ಕ, ನಿವೃತ್ತ ನೌಕರ ಸಂಘದ ಅಧ್ಯಕ್ಷ ಎಂ.ಎನ್.ಹೆಗಡೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.