ADVERTISEMENT

ವಾಲ್ಮೀಕಿ ನಿಗಮದ ಹಣ ವರ್ಗಾವಣೆ: ಸಿಬಿಐಗೆ ವಹಿಸಿ; ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 30 ಮೇ 2024, 16:02 IST
Last Updated 30 ಮೇ 2024, 16:02 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬಳ್ಳಾರಿ/ವಿಜಯನಗರ: ‘ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ನೂರಾರು ಕೋಟಿ ಹಣ ಹೈದರಾಬಾದ್‌ನ ಸಹಕಾರಿ ಬ್ಯಾಂಕ್‌ಗೆ ವರ್ಗಾವಣೆಯಾಗಿದ್ದು, ಇದರ ಒಟ್ಟಾರೆ ಪ್ರಕರಣವು ಸಿಬಿಐನಿಂದ ತನಿಖೆ ಆಗಬೇಕು’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

‘₹ 10 ಕೋಟಿಗಿಂತ ಅಧಿಕ ಮೊತ್ತದ ಹಣಕಾಸು ಹಗರಣ ಎಂದಾದರೆ ಸಿಬಿಐನಿಂದ ತನಿಖೆ ನಡೆಸಬೇಕು ಎಂಬ ನಿಯಮ ಇದೆ. ಈ ಹಣವನ್ನು ಮುಖ್ಯಮಂತ್ರಿ ಮರಳಿ ತರಬೇಕು. ಆದರೆ, ಈ ಹಣವು ಚುನಾವಣೆಗೆ ಬಳಕೆಯಾಗಿರುವ ಸಾಧ್ಯತೆ ಇದೆ’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

‘ಗುತ್ತಿಗೆದಾರ ಸಾವಿನ ವಿಷಯದಲ್ಲಿ ಈಶ್ವರಪ್ಪನವರ ತಪ್ಪಿರಲಿಲ್ಲ. ಆದರೂ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಿದ್ದರು. ಆದರೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಅವರ ಡೆತ್‌ನೋಟ್‌ನಲ್ಲಿ ಎರಡೆರಡು ಬಾರಿ ಸಚಿವರ ಮೌಖಿಕ ಆದೇಶದ ಕುರಿತು ಉಲ್ಲೇಖವಿದೆ. ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೆ? ಹೀಗಾಗಿ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು’ ಎಂದು ಅವರು ಆಗ್ರಹಿಸಿದರು.

ADVERTISEMENT

ಬಳ್ಳಾರಿಯಲ್ಲಿ ಸುದ್ದಿಗಾರರ ಜೊತೆ ವಿಧಾನ ಪರಿಷತ್ತಿನ ಸದಸ್ಯ ಎನ್.ರವಿಕುಮಾರ್ ಮಾತನಾಡಿ, ‘ವಾಲ್ಮೀಕಿ ನಿಗಮದ ಪ್ರಕರಣ ಸಾಮಾನ್ಯವಲ್ಲ. ಇದು ಸಂಘಟಿತ ಹಗರಣ. ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದರು.

‘ಜೂನ್‌ 6ರೊಳಗೆ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ, ಜೂನ್ 7ರಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರತಿಭಟನೆ ನಡೆಸಲಾಗುವುದು‘ ಎಂದು ಅವರು ಎಚ್ಚರಿಕೆ ನೀಡಿದರು.

‘ನಿಗಮದಲ್ಲಿನ ಭ್ರಷ್ಟಾಚಾರದ ವಿರುದ್ಧ ಶಿವಮೊಗ್ಗ ಮತ್ತು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿದರೂ ಸಚಿವರು ರಾಜೀನಾಮೆ ಕೊಟ್ಟಿಲ್ಲ‌‌. ಹಗರಣದ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗೂ ಗೊತ್ತಿದ್ದರೂ ಸುಮ್ಮನಿದ್ದಾರೆ’ ಎಂದರು.

ಎನ್‌.ರವಿಕುಮಾರ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.