ಹರಪನಹಳ್ಳಿ : 7ನೇ ವೇತನ ಆಯೋಗದಿಂದ ವರದಿ ಪಡೆದು ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಸಮಿತಿಯವರು ಮಂಗಳವಾರ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಿಂದ ಹೂವಿನ ಹಡಗಲಿ ರಸ್ತೆಯಲ್ಲಿರುವ ಶಾಸಕಿ ಲತಾ ಮಲ್ಲಿಕಾರ್ಜುನ್ ಅವರ ನಿವಾಸದ ವರೆಗೂ ಬೈಕ್ ರ್ಯಾಲಿ ಮೂಲಕ ತೆರಳಿದ ಸರ್ಕಾರಿ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮನವಿ ಸಲ್ಲಿಸಿದರು.
ಹೊಸ ಪಿಂಚಣಿಗೆ ಒಳಪಡುವ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಕಷ್ಟಕರವಾಗುತ್ತದೆ. ಆದ್ದರಿಂದ ಎನ್.ಪಿ.ಎಸ್ ನೌಕರರಿಗೂ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಸರ್ಕಾರಿ ನೌಕರರಿಗೆ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದರು.
ತಾಲ್ಲೂಕು ಅಧ್ಯಕ್ಷ ಎಸ್.ರಾಮಪ್ಪ, ರಾಜ್ಯ ಸಮಿತಿ ಸದಸ್ಯ ಬಸವರಾಜ ಸಂಗಪ್ಪನವರ್, ವೆಂಕಟೇಶ ಬಾಗಲಾರ, ಬಿ.ಎಚ್.ಚಂದ್ರಪ್ಪ, ಬಿ.ರುದ್ರಾಚಾರಿ, ಎ.ಸುಮಾ, ಬುಳ್ಳಪ್ಪ, ರಮೇಶ್, ಅತಾವುಲ್ಲಾ, ದೇವೇಂದ್ರಗೌಡ, ಗುರುಪ್ರಸಾದ್, ರಾಜಶೇಖರ, ಕೆ.ನಟರಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.