ಹೊಸಪೇಟೆ (ವಿಜಯನಗರ): ಪ್ರತಿ ಶುಕ್ರವಾರ ಈಡಿಸ್ ಇಜಿಪ್ಟೆ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಅಭಿಯಾನಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ. ಶುಕ್ರವಾರ ಇಲ್ಲಿ ಚಾಲನೆ ನೀಡಿದರು.
ಇಲ್ಲಿನ 100 ಹಾಸಿಗೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಅಭಿಯಾನಕ್ಕೆ ರಾಜ್ಯದಾದ್ಯಂತ ಏಕಕಾಲದಲ್ಲಿ ಚಾಲನೆ ಸಿಕ್ಕಿದೆ. ಮನೆಮನೆಗೆ ತೆರಳಿ ಡೆಂಗಿ ಮತ್ತು ಅದರ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು’ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ ನಾಯ್ಕ್, ‘ಮಳೆಗಾಲ ಇರುವುದರಿಂದ ನಿಂತ ನೀರಿನಲ್ಲಿ ಈಡಿಸ್ ಇಜಿಪ್ಟೆ ಸೊಳ್ಳೆಯ ಲಾರ್ವ ಉತ್ಪತ್ತಿಯಾಗುತ್ತದೆ. ಸಾರ್ವಜನಿಕರು ಮನೆಯಲ್ಲಿ ಹೆಚ್ಚು ದಿನಗಳ ಕಾಲ ನೀರನ್ನು ಶೇಖರಣೆ ಮಾಡದೇ ಹಾಗೂ ಮನೆಯ ಅಕ್ಕ ಪಕ್ಕ ಜಾಗದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು’ ಎಂದು ಕೇಳಿಕೊಂಡರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಮಲಮ್ಮ, ‘ಬಳಸಿ ಎಸೆಯುವ ಟೀ ಕಪ್, ಪ್ಲಾಸ್ಟಿಕ್ ಬಾಟಲ್, ಡಬ್ಬಗಳು ನಿರುಪಯುಕ್ತ ವಸ್ತುಗಳಲ್ಲಿ ನೀರು ಸಂಗ್ರಹವಾಗುವುದರಿಂದ ಲಾರ್ವಗಳು ಬೆಳೆಯುತ್ತವೆ. ನಮ್ಮ ಸಣ್ಣ ನಿರ್ಲಕ್ಷ್ಯವೂ ಡೆಂಗಿ ಜ್ವರದಿಂದ ನರಳುವಂತೆ ಮಾಡಬಹುದು’ ಎಂದರು.
ತುಂಗಭದ್ರ ಸ್ಕೂಲ್ ಆಫ್ ನರ್ಸಿಂಗ್, ಮಲ್ಲಿಗೆ ಪ್ಯಾರಾ ಮೆಡಿಕಲ್, ದೀಪಾಲಿ ಸ್ಕೂಲ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ಬೇರೆ ಬೇರೆ ಗುಂಪುಗಳಾಗಿ ಮನೆಮನೆಗೆ ತೆರಳಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಆರ್.ಸಿ.ಎಚ್ ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಷಣ್ಮುಖ ನಾಯಕ್, ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ, ತಾಲ್ಲೂಕು ಅರೋಗ್ಯ ಅಧಿಕಾರಿ ಡಾ. ಭಾಸ್ಕರ್, ಆರೋಗ್ಯ ನಿರೀಕ್ಷಣಾಧಿಕಾರಿ ಧರ್ಮನಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.