ನಿಡಗುಂದಿ: ತಾಲ್ಲೂಕಿನ ಬೇನಾಳ ಗ್ರಾಮ ಪಂಚಾಯ್ತಿ ಅಧ್ಯಕ್ಷ ರಮೇಶ ವಂದಾಲ ಬೇನಾಳ ಎನ್.ಎಚ್ ಗ್ರಾಮಕ್ಕೆ ತೆರಳಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು.
ಚರಂಡಿ ಸಮಸ್ಯೆಯನ್ನು ಗಮನಿಸಿ, ಇಡೀ ದಿನ ಸ್ವಚ್ಛತಾ ಕಾರ್ಯ ನಡೆಸಿ ನೀರು ತಾತ್ಕಾಲಿಕವಾಗಿ ಸರಾಗವಾಗಿ ಹರಿಯುವಂತೆ ಮಾಡಿದರು. ಗ್ರಾಮದಲ್ಲಿ ಕೆಟ್ಟಿರುವ ಬೀದಿ ದೀಪಗಳನ್ನು ಬದಲಾಯಿಸಿ, ಎಲ್ಲೆಲ್ಲಿ ಅಗತ್ಯವೋ ಅಲ್ಲಲ್ಲಿ ವಿದ್ಯುತ್ ದೀಪಗಳನ್ನು ಹಾಕಿದರು. ಕಾರ್ಮಿಕರು ಗ್ರಾಮದ ಪ್ರಮುಖ ಬೀದಿಗಳಲ್ಲಿ ರಸ್ತೆ ಕಸಗೂಡಿಸಿದರು.
ಗ್ರಾಮ ಪಂಚಾಯ್ತಿ ಅಧ್ಯಕ್ಷ ರಮೇಶ ವಂದಾಲ ಮಾತನಾಡಿ, ಮಹಿಳಾ ಶೌಚಾಲಯದ ಸಮಸ್ಯೆ ಹಾಗೂ ಚರಂಡಿ ನೀರು ಸರಾಗವಾಗಿ ಹರಿಯಲು ಶಾಶ್ವತ ಕ್ರಮ ಕೈಗೊಳ್ಳಲಾಗುವುದು. ನಿತ್ಯವೂ ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ ಎಂದರು.
ಬೇನಾಳ ಆರ್.ಎಸ್. ಮತ್ತು ಬೇನಾಳ ಎನ್.ಎಚ್. ಗ್ರಾಮದ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಸಚಿವ ಶಿವಾನಂದ ಪಾಟೀಲ ಹಾಗೂ ಕೆಬಿಜೆಎನ್ಎಲ್ ಅಧಿಕಾರಿಗಳಿಗೆ ಮನವಿ ಮಾಡಲಾಗುವುದು ಎಂದರು. ಪಿಡಿಒ ಬಾದಶಹಾ ಖೀಜಿ ಮತ್ತೀತರರು ಇದ್ದರು.
ಬೇನಾಳ ಎನ್.ಎಚ್ ಗ್ರಾಮದಲ್ಲಿನ ಸಮಸ್ಯೆ ಕುರಿತು ‘ಪ್ರಜಾವಾಣಿ’ ಬುಧವಾರ ವಿಶೇಷ ವರದಿ ಪ್ರಕಟಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.