ಇಂಡಿ (ವಿಜಯಪುರ ಜಿಲ್ಲೆ): ತಾಲ್ಲೂಕಿನ ತೆಗ್ಗೆಳ್ಳಿ ಗ್ರಾಮದಲ್ಲಿ ನೀರಿನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಗ್ರಾಮದ ನಿವಾಸಿ ಶಂಕರ ಚಂದ್ರಶೇಖರ ಕಡಣಿ ಎಂಬುವರು ಮಂಗಳವಾರ ಇಂಡಿ ಪಟ್ಟಣದ ಬಸ್ ನಿಲ್ದಾಣದ ಬಳಿಯಿರುವ 250 ಅಡಿ ಎತ್ತರದ ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿದ್ದು ಆತಂಕಕ್ಕೆ ಕಾರಣವಾಯಿತು.
‘ತೆಗ್ಗೆಳ್ಳಿ ಗ್ರಾಮದಲ್ಲಿ ನೀರಿನ ಸಮಸ್ಯೆಯಿದ್ದು, ಪರಿಹರಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಆಸಕ್ತಿ ತೋರುತ್ತಿಲ್ಲ. ನೀರಿನ ಸಮಸ್ಯೆ ಬಗೆಹರಿಸಿದರೆ ಮಾತ್ರ ಕೆಳಗಿಳಿಯುವೆ’ ಎಂದು ಶಂಕರ ಕಡಣಿ ತಿಳಿಸಿದರು.
ಪೊಲೀಸ್ ಇಲಾಖೆ ಮತ್ತು ಅಗ್ನಿಶಾಮಕ ಠಾಣಾ ಅಧಿಕಾರಿಗಳು, ಸಿಬ್ಬಂದಿ ಪರಿಸ್ಥಿತಿ ನಿಭಾಯಿಸಲು ಪ್ರಯತ್ನಿಸಿದರು. ಒಂದು ವೇಳೆ ಟವರ್ನಿಂದ ಜಿಗಿದಲ್ಲಿ, ರಕ್ಷಣೆಗಾಗಿ ಜಾಳಿಗೆಯ ವ್ಯವಸ್ಥೆ ಕೂಡ ಮಾಡಿಕೊಂಡರು.
‘ನೀರಿನ ಸಮಸ್ಯೆ ನಿವಾರಿಸುವುದಾಗಿ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ತಹಶೀಲ್ದಾರ್ ಮನವೊಲಿಸಿದ ಬಳಿಕ ಶಂಕರ ಟವರ್ನಿಂದ ಕೆಳಗಿಳಿದು ಬಂದರು. ತೆಗ್ಗೆಳ್ಳಿ ಗ್ರಾಮದಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಆದ್ಯತೆ ನೀಡಲಾಗುವುದು’ ಎಂದು ಉಪವಿಭಾಗಾಧಿಕಾರಿ ಅಬೀದ ಗದ್ಯಾಳ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.