ವಿಜಯಪುರ: ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿರುವುದನ್ನು ಸರ್ಕಾರ ಕೆ.ಎಂ.ಎಫ್ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ( ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ಭಗವಾನರೆಡ್ಡಿ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ರಾಜ್ಯದಲ್ಲಿ ಪ್ರತಿದಿನ 1 ಕೋಟಿ ಲೀಟರ್ ಹೆಚ್ಚು ಹಾಲು ಸಂಗ್ರಹವಾಗುತ್ತಿದ್ದು, ಉತ್ಪಾದಕರಿಂದ ಈ ಹಾಲನ್ನು ಖರೀದಿಸಬೇಕಾಗಿದೆ. ಜನರಿಗೆ 50 ಎಂಎಲ್ ಹೆಚ್ಚು ತಲುಪಿಸಿ, ಹೆಚ್ಚುವರಿ ₹2 ಸಂಗ್ರಹಿಸಲಾಗುತ್ತಿದೆ ಎಂದು ಕೆಎಂಎಫ್ ಹೇಳುತ್ತಿದೆ. ಜನರಿಗೆ ಇದು ‘ಉಗುಳಲೂ ಆಗದ ನುಂಗಲೂ ಆಗದ ಬಿಸಿ ತುಪ್ಪ’ವಾಗಿ ಪರಿಣಮಿಸಿದೆ.
ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿದೆ, ತರಕಾರಿ ಹಾಗೂ ಇನ್ನಿತರ ಅಗತ್ಯ ವಸ್ತುಗಳ ದರ ಕೈಗೆ ನಿಲುಕುತ್ತಿಲ್ಲ. ಹಾಲಿನ ದರ ಏರಿಕೆ ಜನರನ್ನು ಮತ್ತಷ್ಟು ಕಷ್ಟಕ್ಕೆ ದೂಡಲಿದೆ. ಹಾಗಾಗಿ ಸರ್ಕಾರ ಹಾಲಿನ ದರ ಹೆಚ್ಚಿಸದೆ ಸಂಗ್ರಹವಾದ ಹೆಚ್ಚುವರಿ 1 ಕೋಟಿ ಲೀಟರ್ ಹಾಲಿಗೆ ಸಬ್ಸಿಡಿ ನೀಡಬೇಕು ಮತ್ತು ರಿಯಾಯಿತಿ ದರದಲ್ಲಿ ಬಡಜನರಿಗೆ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.