ಯಾದಗಿರಿ: ಜಿಲ್ಲೆಯ ಆರು ತಾಲ್ಲೂಕುಗಳ ಪ್ರಾಥಮಿಕ, ಸಮುದಾಯ, ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಇಲ್ಲ’ಗಳ ಮಧ್ಯೆ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಮಂಜೂರು ಹುದ್ದೆಗಳಿಗಿಂತ ಅರ್ಧಕ್ಕಿಂತ ಖಾಲಿ ಇವೆ.
ತಜ್ಞ ವೈದ್ಯರು ಸೇರಿದಂತೆ ಜಿಲ್ಲೆಯಲ್ಲಿ ಎ ಗ್ರೇಡ್ನ 116 ಹುದ್ದೆಗಳಿವೆ. ಇದರಲ್ಲಿ 61 ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, 55 ಹುದ್ದೆಗಳು ಖಾಲಿ ಇವೆ. ಜಿಲ್ಲಾ ಕೇಂದ್ರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಜಿಲ್ಲಾಸ್ಪತ್ರೆ, ನಗರ ಆರೋಗ್ಯ, ನಮ್ಮ ಕ್ಲಿನಿಕ್ಗಳಲ್ಲಿ ಅಗತ್ಯಕ್ಕಿಂತ ವೈದ್ಯರ ಕೊರತೆ ಕಾಡುತ್ತಿದೆ. ಇನ್ನು ತಾಲ್ಲೂಕು, ಗ್ರಾಮೀಣ ಭಾಗದಲ್ಲಿ ಸಮಸ್ಯೆ ಹೇಳತೀರಾಗಿದೆ.
ಸರ್ಕಾರಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಸಮಸ್ಯೆಗಳು ಹಾಗೂ ಸವಾಲುಗಳು ಸಮವಾಗಿ ಅಂಟಿಕೊಂಡಿವೆ. ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಲ್ಲಗಳ ನಡುವೆ ಕರ್ತವ್ಯ ನಿರ್ವಹಿಸಬೇಕು. ಸಿಬ್ಬಂದಿ ಕೊರತೆ, ಔಷಧಿ ಸಂಗ್ರಹದ ಕೋಣೆಯ ಬರ, ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲ. ವಸತಿ ಕೊರತೆ, ರೋಗ ತಪಾಸಣೆಗೆ ಯಂತ್ರಗಳ ಬರ ಇವೆಲ್ಲದರ ನಡುವೆ ರೋಗಿಯನ್ನು ತಪಾಸಣೆ ಮಾಡುವ ಸವಾಲುಗಳು ಇವೆ ಎನ್ನುತ್ತಾರೆ ವೈದ್ಯರು.
ಅಲ್ಲದೆ, ವೈದ್ಯರಿಗೆ ಗ್ರಾಮೀಣ ಪ್ರದೇಶದಲ್ಲಿ ಕಾಡುವ ಸಾಂಕ್ರಾಮಿಕ ರೋಗದ ಬಗ್ಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಹೊಣೆಗಾರಿಕೆ ಇದೆ. ಜಿಲ್ಲೆಯಲ್ಲಿ ಹೆಚ್ಚಿನ ಪ್ರಾಥಮಿಕ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಸಾಕಷ್ಟು ಹುದ್ದೆಗಳ ಕೊರತೆ ಇವೆ ಎನ್ನುತ್ತಾರೆ ಸಾರ್ವಜನಿಕರು.
ಎಲ್ಲೆಲ್ಲಿ ಎಷ್ಟೆಷ್ಟು ಖಾಲಿ: ವಡಗೇರಾ ತಾಲ್ಲೂಕಿನ ವ್ಯಾಪ್ತಿಯಲ್ಲಿ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಒಂದು ಸಮುದಾಯ ಆರೋಗ್ಯ ಕೇಂದ್ರವಿದೆ. ಆಸ್ಪತ್ರೆಗಳಲ್ಲಿ ಸರಿಯಾದ ಸಿಬ್ಬಂದಿ ಹಾಗೂ ವೈದ್ಯರಿಲ್ಲದೆ ಈ ಭಾಗದ ರೋಗಿಗಳು ದೂರದ ಜಿಲ್ಲಾ ಕೇಂದ್ರಕ್ಕೆ ಇಲ್ಲವೆ ಪಕ್ಕದ ರಾಯಚೂರು ಜಿಲ್ಲೆಗೆ ಹೋಗುವುದು ಅನಿವಾರ್ಯವಾಗಿದೆ.
ತಾಲ್ಲೂಕಿನ ಬೆಂಡೆಬೆಂಬಳಿ ಹಾಗೂ ತಡಿಬಿಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಡಗೇರಾ ಸಮುದಾಯ ಕೇಂದ್ರದ ವೈದ್ಯರು ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ. ಇನ್ನು ಹಯ್ಯಾಳ (ಬಿ) ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಹಾಪುರ ವೈದ್ಯಾಧಿಕಾರಿಗಳು ಉಸ್ತುವಾರಿ ವಹಿಸಿಕೊಂಡಿದ್ದಾರೆ.
ವಡಗೇರಾ ಪಟ್ಟಣದಲ್ಲಿ ಇರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ತ್ರೀ ರೋಗ ತಜ್ಞರು ಇಲ್ಲ. ಸಾಮಾನ್ಯ ಹೆರಿಗೆ ಮಾತ್ರ ಆಸ್ಪತ್ರೆಯಲ್ಲಿ ಮಾಡುತ್ತಾರೆ. ತುರ್ತು ಸನ್ನಿವೇಶದಲ್ಲಿ ಜಿಲ್ಲಾ ಆಸ್ಪತ್ರೆಗೆ ರೋಗಿಗಳನ್ನು ಕಳುಹಿಸುತ್ತಾರೆ. ಇನ್ನೂ ಅರವಳಿಕೆ ತಜ್ಞರು, ಕ್ಷ ಕಿರಣ ತಜ್ಞರು ಇಲ್ಲ.
ಕೆಲವೊಂದು ಆಸ್ಪತ್ರೆಗಳಲ್ಲಿ ಆಯುಷ್ಮಾನ್ ವೈದ್ಯರು ಇದ್ದಾರೆ. ಆದರೆ, ಎಂಬಿಬಿಎಸ್ ವೈದ್ಯರಿಲ್ಲದಿರುವುದರಿಂದ ರೋಗಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.
‘ಇಷ್ಟೆಲ್ಲಾ ಸಮಸ್ಯೆಗಳು ನೂತನ ತಾಲ್ಲೂಕು ವಡಗೇರಾ ವ್ಯಾಪ್ತಿಯಲ್ಲಿ ಇರುವ ಆಸ್ಪತ್ರೆಗಳಲ್ಲಿ ಇದ್ದರೂ ಯಾವೊಬ್ಬ ಜನಪ್ರತಿನಿಧಿಗಳು ಗಮನಹರಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತಿಲ್ಲ’ ಎಂಬ ಆರೋಪ ಜನರಿಂದ ಕೇಳಿಬಂದಿದೆ.
ಕೇಂದ್ರಗಳಲ್ಲಿ ವೈದ್ಯರ ಕೊರತೆ: ಹುಣಸಗಿ ತಾಲ್ಲೂಕಿನಾದ್ಯಂತ ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಹುಣಸಗಿ ಪಟ್ಟಣದಲ್ಲಿ ಸಮುದಾಯ ಆರೋಗ್ಯ ಕೇಂದ್ರವಿದ್ದು, ಬಹುತೇಕ ಆರೋಗ್ಯ ಕೇಂದ್ರಗಳು ವೈದ್ಯರ ಕೊರತೆ ಎದುರಿಸುತ್ತಿವೆ. ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಕಾಯಂ ವೈದ್ಯರಿಲ್ಲದೆ ಪ್ರಭಾರಿಗಳ ಮೇಲೆ ಕಾರ್ಯ ನಿರ್ವಹಿಸುವಂತಾಗಿದೆ. ಇದರಿಂದಾಗಿ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.
ಹುಣಸಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರು ವೈದ್ಯರು ಬೇಕಾಗಿದ್ದು, ಸದ್ಯ ಮೂವರು ಕಾರ್ಯನಿರ್ವಹಿಸುತ್ತಿದ್ದಾರೆ. ಮಕ್ಕಳ ತಜ್ಞರು, ಪ್ರಸೂತಿ ತಜ್ಞರು, ಅರವಳಿಕೆ ತಜ್ಞರು, ಸೀನಿಯರ್ ಮೆಡಿಕಲ್ ಆಫೀಸರ್, ದಂತ ವೈದ್ಯರು ಸೇರಿದಂತೆ ಇತರ ತಜ್ಞ ವೈದ್ಯರ ಅಗತ್ಯವಿದ್ದು, ಮೂವರು ಕಾರ್ಯನಿರ್ವಹಿಸುತ್ತಿದ್ದಾರೆ.
‘ತಾಲ್ಲೂಕು ಕೇಂದ್ರವಾಗಿರುವ ಈ ಸಮುದಾಯ ಆರೋಗ್ಯ ಕೇಂದ್ರಕ್ಕೆ ನಿತ್ಯವೂ ಸುಮಾರು 150 ರಿಂದ 200 ಜನ ಹೊರರೋಗಿಗಳು ತಪಾಸಣೆಗೆ ಆಗಮಿಸುತ್ತಿದ್ದಾರೆ. ಅಲ್ಲದೆ ಪ್ರತಿದಿನ 15 ರಿಂದ 20 ಜನ ಒಳರೋಗಿಗಳು ಕೂಡ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಡಾ. ಎಸ್.ಬಿ.ಪಾಟೀಲ ಮಾಹಿತಿ ನೀಡಿದರು.
‘ಹುಣಸಗಿ ತಾಲ್ಲೂಕಿನ ಸಾರ್ವಜನಿಕರಿಗೆ ತ್ವರಿತ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಲಭ್ಯವಿರುವ ವೈದ್ಯಕೀಯ ಸಿಬ್ಬಂದಿಯನ್ನೇ ಬಳಸಿಕೊಂಡು ಗುಣಮಟ್ಟದ ಸೇವೆ ನೀಡುವಲ್ಲಿ ಮುಂದಾಗುತ್ತಿದ್ದೇವೆ’ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಆರ್.ವಿ.ನಾಯಕ ಮಾಹಿತಿ ನೀಡಿದರು.
ಪೂರಕ ವರದಿ: ಟಿ.ನಾಗೇಂದ್ರ, ಭೀಮಶೇನರಾವ ಕುಲಕರ್ಣಿ, ನಾಮದೇವ ವಾಟ್ಕರ್
ಜಿಲ್ಲೆಯಲ್ಲಿ ಸಿಬ್ಬಂದಿ ಕೊರತೆಯ ಮಧ್ಯೆಯೂ ಉತ್ತಮವಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ಸರ್ಕಾರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ. ಆಸ್ಪತ್ರೆಯಲ್ಲಿ ಸೌಲಭ್ಯ ಕಲ್ಪಿಸಲಾಗುತ್ತಿದೆಡಾ. ಪ್ರಭುಲಿಂಗ ಮಾನಕರ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಗ್ರಾಮೀಣ ಪ್ರದೇಶದಲ್ಲಿ ಸಾಂಕ್ರಾಮಿಕ ರೋಗದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಇನ್ನಿತರ ಮಾಹಿತಿಯನ್ನು ವೈದ್ಯರು ನೀಡಬೇಕು. ವಸತಿ ಹಾಗೂ ಅಗತ್ಯ ಸೌಲಭ್ಯಗಳು ಇಲ್ಲ. ಒತ್ತಡದ ನಡುವೆ ಕೆಲಸ ನಿರ್ವಹಿಸಬೇಕುಡಾ. ರಮೇಶ ಗುತ್ತೆದಾರ ಟಿಎಚ್ಒ ಶಹಾಪುರ
ಯಾದಗಿರಿ ಜಿಲ್ಲೆಯಲ್ಲಿ ಎಂಬಿಬಿಎಸ್ ಪದವಿ ಪಡೆದ ವೈದ್ಯರು ಸೇವೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಹೆಚ್ಚಿನ ಓದಿಗಾಗಿ ಬೇರೆಡೆ ತೆರಳುವುದರಿಂದ ನಮ್ಮಲ್ಲಿ ವೈದ್ಯರ ಕೊರತೆ ಕಾಡುತ್ತಲಿದೆಡಾ. ಯಲ್ಲಪ್ಪ ಪಾಟೀಲ ಹುಲಕಲ್ ಸಾರ್ವಜನಿಕ ಆಡಳಿತ ವೈದ್ಯಾಧಿಕಾರಿ ಶಹಾಪುರ
ಕಳೆದ ಒಂದು ವರ್ಷದಿಂದ ತಡಿಬಿಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್ ವೈದ್ಯರು ಇಲ್ಲದಿರುವುದರಿಂದ ರೋಗಿಗಳಿಗೆ ಮಹಿಳೆಯರಿಗೆ ಸಾಕಷ್ಟು ಸಮಸ್ಯೆಯಾಗಿದೆ. ತುರ್ತು ಸಮಯದಲ್ಲಿ ರೋಗಿಗಳನ್ನು ಜಿಲ್ಲಾ ಕೇಂದ್ರಕ್ಕೆ ಕರೆದುಕೊಂಡು ಹೋಗುವುದು ಅನಿವಾರ್ಯವಾಗಿದೆರವಿಕುಮಾರ ದೇವರಮನಿ ಜಿಲ್ಲಾಧ್ಯಕ್ಷ ವಿಷ್ಣುಸೇನಾ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.