ಸೈದಾಪುರ: ‘ಮಕ್ಕಳು ಶಾಲೆಯಲ್ಲಿ ಕಲಿಯುವುದಕ್ಕಿಂತ ಹೆಚ್ಚು ಮನೆ ಹಾಗೂ ಸಮಾಜದಿಂದ ಕಲಿಯುತ್ತವೆ. ಹಾಗಾಗಿ ಉತ್ತಮ ನಡತೆ, ಆಚಾರ, ವಿಚಾರ ಮುಂತಾದ ಸಂಗತಿಗಳು ಸಿಗುವ ಹಾಗೆ ನೋಡಿಕೊಳ್ಳಬೇಕು. ಮನೆ ಮಕ್ಕಳಿಗೆ ಸಂಸ್ಕಾರ ನೀಡುವ ಕೇಂದ್ರಗಳಾಗಬೇಕು ಎಂದು ಸಂಪನ್ಮೂಲ ವ್ಯಕ್ತಿ ಭಿಮಣ್ಣ ಬಿ.ವಡವಟ್ ಅಭಿಪ್ರಾಯಪಟ್ಟರು.
ಸಮೀಪದ ಕಾಳೆಬೆಳಗುಂದಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕೇಂದ್ರದಿಂದ ಏರ್ಪಡಿಸಿದ್ದ ಶಿಕ್ಷಣ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ಬಾಲ್ಯದಲ್ಲಿ ಕಲಿತದ್ದು ಕಟ್ಟಡಕ್ಕೆ ಅಡಿಪಾಯದಂತೆ ಜೀವನದಲ್ಲಿ ಭವಿಷ್ಯಕ್ಕೆ ನೆರವಾಗುತ್ತದೆ. ಮಕ್ಕಳಿಗೆ ಚಿಕ್ಕಂದಿನಿಂದಲೇ ಸಂಸ್ಕಾರ, ಮೌಲ್ಯಗಳನ್ನು ಕಲಿಸಬೇಕು. ಮನೆಯಲ್ಲಿ ದೂರದರ್ಶನ ಮಕ್ಕಳಿಗೆ ಜ್ಞಾನಾರ್ಜನೆಗೆ ಪೂರಕವಾಗಿರಲಿ. ಅವರು ದಾರಿತಪ್ಪುವಷ್ಟು ಅದನ್ನು ನೋಡದಿರಲಿ. ಪ್ರತಿ ಮಗುವಿಗೆ ಮನೆಯೇ ಮೊದಲ ಪಾಠಶಾಲೆ. ತಾಯಂದಿರು ಮಕ್ಕಳಿಗೆ ಮನೆಯಲ್ಲಿ ಉತ್ತಮ ಸಂಸ್ಕಾರ ಕಲಿಸಬೇಕು’ ಎಂದು ಹೇಳಿದರು.
ಜ್ಞಾನವಿಕಾಸ ಸಮನ್ವಧಿಕಾರಿ ಲಕ್ಷ್ಮೀದೇವಿ ಮಾತನಾಡಿ, ‘ಧರ್ಮಸ್ಥಳ ಸಂಸ್ಥೆ ಹಲವು ಸಾಮಾಜಿಕ ಚಟುವಟಿಕೆಗಳನ್ನು ಮಾಡುತ್ತಿದ್ದು, ಅದರಲ್ಲಿ ಮುಖ್ಯವಾಗಿ ಸಮುದಾಯ ಜ್ಞಾನವೃದ್ಧಿಗೆ ಅನೇಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಆ ದಿಸೆಯಲ್ಲಿ ಗ್ರಾಮೀಣ ಭಾಗದ ಮಾತೆಯರು ಇತಂಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜ್ಞಾನ ಪಡೆಯುವುದರ ಮೂಲಕ ನಿಮ್ಮ ಕುಟುಂಬ ಮತ್ತು ಸಮುದಾಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು’ ಎಂದು ತಿಳಿಸಿದರು.
ಈ ವೇಳೆ ಮೇಲ್ವಿಚಾರಕ ಶಿವಕುಮಾರ, ಸೇವಾಪ್ರತಿನಿಧಿ ರೆಡ್ಡಪ್ಪ ಮಹಿಳಾ ಸೇವಾ ಸಂಘದ ಸದಸ್ಯರು ಸೇರಿದಂತೆ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.