ADVERTISEMENT

ತೈಲ ಬೆಲೆ ಹೆಚ್ಚಳಕ್ಕೆ SUCI ಖಂಡನೆ: ಜೂನ್‌ 18ರಂದು ರಾಜ್ಯವ್ಯಾಪಿ ಹೋರಾಟಕ್ಕೆ ಕರೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2024, 16:02 IST
Last Updated 16 ಜೂನ್ 2024, 16:02 IST
ಶರಣಗೌಡ ಗೂಗಲ್
ಶರಣಗೌಡ ಗೂಗಲ್   

ಯಾದಗಿರಿ: ಚುನಾವಣೆಗಳು ಮುಗಿಯುತ್ತಿದ್ದಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಹೆಚ್ಚಳ ಮಾಡಿ ಲೀಟರಿಗೆ ತಲಾ ₹ 3 ಏರಿಕೆಗೆ ಕಾರಣವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಎಸ್‌ಯುಸಿಐ (ಕಮ್ಯುನಿಸ್ಟ್) ಜಿಲ್ಲಾ ಕಾರ್ಯದರ್ಶಿ ಶರಣಗೌಡ ಗೂಗಲ್ ಖಂಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯ ಖಜಾನೆಗೆ ಈ ಆರ್ಥಿಕ ವರ್ಷದಲ್ಲಿ ಸುಮಾರು ₹3,000 ಕೋಟಿ ಹೆಚ್ಚುವರಿ ತೆರಿಗೆ ವಸೂಲಿಯಾಗಲಿದೆ. ಇದರಿಂದ ಸಾರಿಗೆ, ಸರಕು ಸಾಗಾಣಿಕೆ ವೆಚ್ಚ ಏರಿಕೆಯಾಗಿ ಬೆಲೆ ಏರಿಕೆಯ ಮೇಲೆ ಸರಣಿ ಪರಿಣಾಮ ಉಂಟಾಗಲಿದೆ. ತರಕಾರಿ, ದವಸಧಾನ್ಯಗಳ ಬೆಲೆ ಏರಿಕೆಯಿಂದ ಕಂಗಾಲಾದ ಜನರಿಗೆ ಇದು ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಪ್ರತಿ ಲೀಟರ್ ಬೆಲೆಯಲ್ಲಿ ಅರ್ಧದಷ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸಿರುವ ತೆರಿಗೆಯೇ ಇದೆ. ಲೋಕಸಭಾ ಚುನಾವಣೆಗೆ ಸ್ವಲ್ಪ ಮುಂಚೆ ಕೇಂದ್ರ ಬಿಜೆಪಿ ಸರ್ಕಾರವು ಮತದಾರರನ್ನು ಓಲೈಸಲು ₹2 ಕಡಿತ ಮಾಡಿತ್ತು. ರಷ್ಯಾ - ಉಕ್ರೇನ್ ಯುದ್ಧದ ಲಾಭ ಪಡೆದು ಭಾರತ ಸರ್ಕಾರವು ಜಾಗತಿಕ ದರಕ್ಕಿಂತ ಸುಮಾರು ಶೇ 35ರಷ್ಟು ಕಡಿಮೆಗೆ ಕಚ್ಚಾ ತೈಲವನ್ನು ಖರೀದಿ ಮಾಡಿದರೂ, ಅದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲಿಲ್ಲ. ಲಕ್ಷಾಂತರ ಕೋಟಿ ರೂಪಾಯಿ ಭಾರತದ ತೈಲ ಕಂಪನಿಗಳು ಕೊಳ್ಳೆ ಹೊಡೆದಿವೆ. ಈ ಸಾರ್ವಜನಿಕ ತೆರಿಗೆಯನ್ನು ಮೋದಿ ಸರ್ಕಾರವು ಕಾರ್ಪೊರೇಟ್ ಬಂಡವಾಳಶಾಹಿಗಳ ಅನುಕೂಲಕ್ಕೆ ಬಳಸಿಕೊಂಡಿದೆ ಎಂದಿದ್ದಾರೆ.

ADVERTISEMENT

ಈಗ ರಾಜ್ಯ ಕಾಂಗ್ರೆಸ್ ಸರ್ಕಾರವು ಕೂಡ ಈ ಜನವಿರೋಧಿ ತೀರ್ಮಾನವನ್ನು ಕೈಗೊಂಡಿದೆ. ಜನರ ಮೇಲಿನ ಈ ಬೆಲೆ ಏರಿಕೆಯ ಹೊಡೆತವನ್ನು ತಕ್ಷಣವೇ ವಾಪಸ್ ಪಡೆಯಬೇಕೆಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.