ನಾರಾಯಣಪುರ: ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ 75 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ.
ಉತ್ತಮ ಮಳೆಯಿಂದಾಗಿ ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿದ್ದರೆ, ಗಿಡಮರಗಳು ಹಚ್ಚಹಸಿರಿನಿಂದ ನಳನಳಿಸುತ್ತಿವೆ. ಮುಂಗಾರು ಮಳೆ ನಿರೀಕ್ಷೆಯಂತೆ ಸುರಿದಿದ್ದರಿಂದ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ.
ಒಳ ಹರಿವು ಆರಂಭ: ಕೃಷ್ಣಾ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗಿರುವುದರಿಂದ ಜಲಾಶಯದ ಒಳಹರಿವು ಆರಂಭವಾಗಿದೆ. ನಿರಂತರ ಮಳೆಯಿಂದಾಗಿ ಬಸವಸಾಗರ ಜಲಾಶಯಕ್ಕೆ ಬುಧವಾರ 4,854 ಕ್ಯೂಸೆಕ್ನಷ್ಟು ನೀರಿನ ಒಳಹರಿವು ಆರಂಭವಾಗಿದೆ. ಜಲಾಶಯದಲ್ಲಿ 489 ಮೀಟರ್ಗೆ ನೀರು ತಲುಪಿದ್ದು, ಸದ್ಯ 20.69 ಟಿಎಂಸಿ ಅಡಿಯಷ್ಟು ನೀರು ಸಂಗ್ರಹವಾಗಿದೆ. ಹೊರಹರಿವು 95 ಕ್ಯೂಸೆಕ್ ಇದೆ ಎಂದು ತಿಳಿದು ಬಂದಿದೆ. ಕಳೆದ ವರ್ಷ ಈ ದಿನಕ್ಕೆ ಒಳಹರಿವು 300 ಕ್ಯೂಸೆಕ್ ಇತ್ತು ಹೊರಹರಿವು 105 ಕ್ಯೂಸೆಕ್ ಇತ್ತು ಎಂದು ಕೆಬಿಜೆಎನ್ಎಲ್ ಮೂಲಗಳಿಂದ ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.