ಬೆಂಗಳೂರು: 2023–24ನೇ ಸಾಲಿನ 5, 8 ಹಾಗೂ 9ನೇ ತರಗತಿ ಸಂಕಲನಾತ್ಮಕ ಮೌಲ್ಯಾಂಕನ (ಎಸ್ಎ–2) ಪೂರ್ಣಗೊಂಡಿದ್ದು, ಮೌಲ್ಯಮಾಪನದಲ್ಲಿ ಹಲವು ದೋಷಗಳು ಉಳಿದುಕೊಂಡಿವೆ ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಆರೋಪಿಸಿದ್ದಾರೆ.
ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರೌಢಶಾಲಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡಿಸಲಾಗಿದೆ. ಸರಿ ಉತ್ತರಗಳಿಗೂ ಅಂಕ ಕಡಿತ ಮಾಡಲಾಗಿದೆ. ಕೆಲ ಬಂಡಲ್ಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನವೇ ಮಾಡಿಲ್ಲ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಅಂಕಗಳು ಬಂದಿವೆ. 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಸಾಕಷ್ಟು ಅನ್ಯಾಯವಾಗಿದೆ ಎಂದು ಹಲವು ಶಿಕ್ಷಣ ಸಂಸ್ಥೆಗಳು ಮಾಹಿತಿ ನೀಡಿವೆ ಎಂದಿದ್ದಾರೆ.
‘ಗೊಂದಲಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಅವರ ಪ್ರತಿಕ್ರಿಯೆಗೆ ಕಾಯುತ್ತಿದ್ದೇವೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.