ಎಲ್ಲಿ?
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಬೆಳಗಾವಿಯ ಗೃಹಕಚೇರಿ
ನಡೆದದ್ದೇನು?
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯ ಹಾಗೂ ಆಶಾ ಕಾರ್ಯಕರ್ತೆಯರ ಸಭೆ ನಡೆಯುತ್ತಿತ್ತು. ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ನೇತೃತ್ವದಲ್ಲಿ ಚುನಾವಣಾಧಿಕಾರಿಗಳು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ದಾಳಿ ಮಾಡಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕಾರ್ಯಕರ್ತೆಯರನ್ನು
ಹೊರಗೆ ಕಳುಹಿಸಿದರು. ಹಲವರಿಂದ ಮಾಹಿತಿ ಸಂಗ್ರಹಿಸಿದರು. ಬಳಿಕ ಸಚಿವೆ ಲಕ್ಷ್ಮಿ ಅವರಿಂದಲೂ ವಿವರ ಪಡೆದರು. ‘ನೀತಿ ಸಂಹಿತೆ ಉಲ್ಲಂಘನೆ ಆಗಿದ್ದರೆ ಸಚಿವೆ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ಚುನಾವಣಾಧಿಕಾರಿಗಳು ತಿಳಿಸಿದರು.
ಮಾಹಿತಿ ಸಿಕ್ಕಿದ್ದು ಹೇಗೆ?
ಬುಧವಾರ ಬೆಳಿಗ್ಗೆಯೇ ಸಚಿವರ ಗೃಹ ಕಚೇರಿಯಲ್ಲಿ ಹಲವಾರು ಅಂಗನವಾಡಿ– ಆಶಾ ಕಾರ್ಯಕರ್ತೆಯರು ಸೇರಿದ್ದರು. ಇದನ್ನು ಕಂಡು ಅಪರಿಚಿತರೊಬ್ಬರು ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಆರೋಪವೇನು?
‘ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಪುತ್ರ ಮೃಣಾಲ್ ಹೆಬ್ಬಾಳಕರ ಕಾಂಗ್ರೆಸ್ನಿಂದ ಸ್ಪರ್ಧಿಸುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ತಮ್ಮ ಮನೆಗೆ ಕರೆಯಿಸಿ ಸಭೆ ನಡೆಸಿದ್ದಾರೆ. ಚುನಾವಣೆಯಲ್ಲಿ ತಮ್ಮ ಮಗನ ಪರ ಮತಗಳನ್ನು ಹಾಕಿಸುವಂತೆ ಒತ್ತಡ ಹೇರುತ್ತಿದ್ದಾರೆ. ಇದು ಅಧಿಕಾರದ ದುರುಪಯೋಗ’ ಎಂದು ಆರೋಪಿಸಲಾಗಿದೆ.
‘ನಾನು ಸಭೆ ನಡೆಸಿಲ್ಲ’
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ,
‘ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸದ ಒತ್ತಡ ಹೆಚ್ಚಾಗಿದ್ದು, ಅದನ್ನು ನಿವಾರಿಸುವಂತೆ ಕೋರಿ ಮನವಿ ಪತ್ರ ನೀಡಲು ಬಂದಿದ್ದರು. ಈಗ ಗ್ಯಾರಂಟಿ ಯೋಜನೆಗಳು, ಪಲ್ಸ್ ಪೋಲಿಯೊ ಕಾರ್ಯಕ್ರಮದ ಒತ್ತಡ ಹೆಚ್ಚಾಗಿದೆ. ಬಿಎಲ್ಒ ಆಗಿ ಕೆಲಸ ಮಾಡಲು ಆಗುತ್ತಿಲ್ಲ ಎಂದು ಕಾರ್ಯಕರ್ತೆಯರು ಮನವಿ ನೀಡಿದ್ದಾರೆ. ಚುನಾವಣೆಗೆ ಸಂಬಂಧಪಟ್ಟಂತೆ ನಾನು ಸಭೆ ನಡೆಸಿಲ್ಲ. ನೀತಿ ಸಂಹಿತೆ ಉಲ್ಲಂಘಿಸಿಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು.
‘ಚುನಾವಣೆ ವೇಳೆ ದೂರು ನೀಡುವುದು ಸಾಮಾನ್ಯ. ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ನಾನು ನಿಯಮ ಉಲ್ಲಂಘಿಸಿಲ್ಲ. ನಾನು ದೇಶದ ಕಾನೂನು ಗೌರವಿಸುತ್ತೇನೆ. ನನಗೆ ಇದು ಐದನೇ ಚುನಾವಣೆ. ಚುನಾವಣೆ ಎದುರಿಸುವುದು ಹೇಗೆ ಎಂಬುದು ಗೊತ್ತು’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.