ಕೋಲ್ಕತ್ತ: ಪಶ್ಚಿಮ ಬಂಗಾಳದ ಘಟಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಿರಣ್ಮಯ್ ಚಟ್ಟೋಪಾಧ್ಯಾಯ ಅವರು ತಮ್ಮ ಪ್ರಮಾಣ ಪತ್ರದಲ್ಲಿ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿರುವ ಎಎಪಿ, ಅವರ ಉಮೇದುವಾರಿಕೆಯನ್ನು ರದ್ದುಪಡಿಸಬೇಕೆಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ನಟ, ರಾಜಕಾರಣಿ ಚಟ್ಟೋಪಾಧ್ಯಾಯ ಅವರು ತಾವು ಖರಗ್ಪುರದ ಐಐಟಿಯಲ್ಲಿ ಸಂಶೋಧನಾ ವಿದ್ಯಾರ್ಥಿ ಎಂದು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
‘ಚಟ್ಟೋಪಾಧ್ಯಾಯ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ನೀಡಿರುವಂತೆ ಅವರು ಸಂಶೋಧನಾ ವಿದ್ಯಾರ್ಥಿಯಾಗಲಿ, ಬೋಧಕರಾಗಲಿ, ಸಂಶೋಧನಾ ಸಹಾಯಕರಾಗಲಿ, ವಿಜ್ಞಾನಿಯಾಗಲಿ ಅಲ್ಲ ಎನ್ನುವುದು ಆರ್ಟಿಐ ಅರ್ಜಿಯಿಂದ ಬಹಿರಂಗಗೊಂಡಿದೆ’ ಎಂದು ಎಎಪಿ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಎಎಪಿಯ ಆರೋಪವನ್ನು ನಿರಾಕರಿಸಿರುವ ಚಟ್ಟೋಪಾಧ್ಯಾಯ, ‘ಇದು ಆಡಳಿತಾರೂಢ ಟಿಎಂಸಿಯ ಕುತಂತ್ರ’ ಎಂದು ಹೇಳಿದ್ದಾರೆ. ತನಗೆ ಅಪಖ್ಯಾತಿ ತರಲು ಯತ್ನಿಸಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ತಿಳಿಸಿದ್ದಾರೆ.
ಎಎಪಿಯ ದೂರನ್ನು ಪರಿಶೀಲಿಸಲಾಗುತ್ತಿದ್ದು, ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.