ಕೋಲ್ಕತ್ತ: ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಸರ್ಕಾರ ರಚಿಸಲು ಟಿಎಂಸಿಯು ಬಾಹ್ಯ ಬೆಂಬಲ ನೀಡಲಿದೆ ಎಂದು ಪಕ್ಷದ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.
ಹೂಗ್ಲಿ ಜಿಲ್ಲೆಯ ಚಿನ್ಸುರಾದಲ್ಲಿ ಬುಧವಾರ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ‘400 ಸ್ಥಾನಗಳನ್ನು ಗೆಲ್ಲುವುದಾಗಿ ಬಿಜೆಪಿ ಹೇಳುತ್ತಿದೆ. ಆದರೆ ಈ ಬಾರಿ ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಜನರು ಆಡಿಕೊಳ್ಳುತ್ತಿದ್ದಾರೆ’ ಎಂದರು.
ಚುನಾವಣಾ ಆಯೋಗವು ಪ್ರಧಾನಿ ಮೋದಿ ಅವರ ‘ಕೈಗೊಂಬೆ’ಯಾಗಿದ್ದು, ಅವರ ನಿರ್ದೇಶನದಂತೆ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ‘ಚುನಾವಣೆಯು ಎರಡೂವರೆ ತಿಂಗಳಷ್ಟು ಸುದೀರ್ಘವಾಗಿ ನಡೆಯುತ್ತಿದ್ದು, ನಿಮಗೆ (ಚುನಾವಣಾ ಅಧಿಕಾರಿಗಳಿಗೆ) ಜನರ ಬವಣೆ ಏನೆಂಬುದು ತಿಳಿಯದು’ ಎಂದು ಟೀಕಿಸಿದರು.
‘ಆಯುಷ್ಮಾನ್ ಭಾರತ್ ಯೋಜನೆಯನ್ನು ವಿಸ್ತರಿಸುವ ಚಿಂತನೆ ಇದೆ ಎಂದು ಪ್ರಧಾನಿ ಹೇಳಿದ್ದಾರೆ. ಚುನಾವಣೆಯ ಸಮಯದಲ್ಲಿ ಅಂತಹ ಘೋಷಣೆ ಏಕೆ ಮಾಡಬೇಕು? ಪ್ರಧಾನಿ ಅವರೇ ನೀವು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದೀರಿ’ ಎಂದು ವಾಗ್ದಾಳಿ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.