ನವದೆಹಲಿ: ಬಿಹಾರದ ಮುಂಗೇರ್ ಕ್ಷೇತ್ರದ ಕೆಲವು ಮತಗಟ್ಟೆಗಳಲ್ಲಿ ಮರುಮತದಾನ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಈ ಸಂಬಂಧ ಹೈಕೋರ್ಟ್ ಮೊರೆ ಹೋಗುವಂತೆ ನ್ಯಾಯಮೂರ್ತಿಗಳಾದ ಎಸ್.ಸಿ.ಶರ್ಮಾ ಮತ್ತು ಪಿ.ಬಿ.ವರಾಳೆ ಅವರ ರಜಾಕಾಲದ ಪೀಠವು ಅರ್ಜಿದಾರರಿಗೆ ಸೂಚಿಸಿತು.
ಮುಂಗೇರ್ನ 45 ಮತಗಟ್ಟೆಗಳಲ್ಲಿ ಮರುಚುನಾವಣೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಆರ್ಜೆಡಿ ಅಭ್ಯರ್ಥಿ ಕುಮಾರಿ ಅನಿತಾ ಅವರು ಅರ್ಜಿಯಲ್ಲಿ ಕೋರಿದ್ದರು. ಕ್ಷೇತ್ರದಲ್ಲಿ ಸ್ಥಳೀಯ ಆಡಳಿತದ ಸಹಕಾರದೊಂದಿಗೆ ಜೆಡಿಯು ಕಾರ್ಯಕರ್ತರು ಬೃಹತ್ ಪ್ರಮಾಣದಲ್ಲಿ ನಕಲಿ ಮತದಾನ ಮಾಡಿದ್ದಾರೆ ಮತ್ತು ಮತಗಟ್ಟೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.
‘ನೀವೇಕೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಾರದು? ಈ ದೇಶದಲ್ಲಿ ಹೈಕೋರ್ಟ್ಗಳನ್ನು ಇನ್ನೂ ಮುಚ್ಚಿಲ್ಲ’ ಎಂದು ಪೀಠವು ಅರ್ಜಿದಾರರಿಗೆ ಹೇಳಿತು.
ಸುಪ್ರೀಂ ಕೋರ್ಟ್ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ನಿರಾಕರಿಸಿದ ನಂತರ ಅನಿತಾ ಕುಮಾರಿ ಅರ್ಜಿ ವಾಪಸ್ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.