ADVERTISEMENT

LS polls: ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಹಾಲಿ ಸಂಸದ ನಿಶಾದ್

ಪಿಟಿಐ
Published 2 ಏಪ್ರಿಲ್ 2024, 9:19 IST
Last Updated 2 ಏಪ್ರಿಲ್ 2024, 9:19 IST
<div class="paragraphs"><p>ಅಜಯ್ ಕುಮಾರ್ ನಿಶಾದ್</p></div>

ಅಜಯ್ ಕುಮಾರ್ ನಿಶಾದ್

   

ನವದೆಹಲಿ: ಬಿಹಾರದ ಮುಜಫ್ಫರ್‌ಪುರದ ಬಿಜೆಪಿ ಸಂಸದ ಅಜಯ್‌ ಕುಮಾರ್‌ ನಿಶಾದ್‌ ಅವರು ಮಂಗಳವಾರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಜಯ್‌ ಅವರಿಗೆ ಬಿಜೆಪಿ ಟಿಕೆಟ್‌ ನಿರಾಕರಿಸಿತ್ತು.

ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಹಾರ ಕಾಂಗ್ರೆಸ್ ಅಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್, ಎಐಸಿಸಿ ರಾಜ್ಯ ಉಸ್ತುವಾರಿ ಮೋಹನ್ ಪ್ರಕಾಶ್, ಎಐಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಪವನ್ ಖೇರಾ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ್ದಾರೆ.

ADVERTISEMENT

‘ನನಗೆ ಯಾವುದೇ ಕಾರಣ ನೀಡದೆಯೇ ಟಿಕೆಟ್‌ ನಿರಾಕರಿಸಲಾಗಿದೆ. ಬಿಹಾರದಲ್ಲಿ ಕಾಂಗ್ರೆಸ್‌ ಪಕ್ಷ ಬಲವರ್ಧನೆಗೆ ಶ್ರಮಿಸುತ್ತೇನೆ’ ಎಂದು ಅಜಯ್‌ ಅವರು ತಿಳಿಸಿದ್ದಾರೆ. ಮುಜಫ್ಫರ್‌ಪುರ ಕ್ಷೇತ್ರಕ್ಕೆ ಬಿಜೆಪಿಯು ರಾಜ್‌ ಭೂಷಣ್‌ ನಿಶಾದ್‌ ಅವರನ್ನು ಅಭ್ಯರ್ಥಿಯನ್ನಾಗಿಸಿದೆ.

ಅಜಯ್ ಕುಮಾರ್ ಅವರು 2014 ಮತ್ತು 2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದ ಮುಜಾಫರ್‌ಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಈ ಬಾರಿಯು ಬಿಜೆಪಿಯಿಂದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು.

ಅಜಯ್ ಕುಮಾರ್ ಸೇರ್ಪಡೆಯಿಂದಾಗಿ ದರ್ಬಾಂಗಾ, ಚಂಪಾರಣ್ ಮತ್ತು ಮಧುಬನಿ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ಮತಗಳನ್ನು ಕ್ರೋಢೀಕರಿಸಲು ಸಾಧ್ಯವಾಗುತ್ತದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ನಿಶಾದ್ ಅವರ ತಂದೆ ಜೈ ನಾರಾಯಣ ಪ್ರಸಾದ್ ನಿಶಾದ್ ಅವರು ನಾಲ್ಕು ಬಾರಿ ಲೋಕಸಭಾ ಸಂಸದರಾಗಿದ್ದರು. 1996 ಮತ್ತು 2004ರಲ್ಲಿ ಆರ್‌ಜೆಡಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2009ರಲ್ಲಿ ಜೆಡಿಯುನಿಂದ ಕಣಕ್ಕಿಳಿದು ಜಯ ಸಾಧಿಸಿದ್ದರು.

ಕೆಲವು ದಿನಗಳ ಹಿಂದಷ್ಟೇ ರಾಜಸ್ಥಾನದ ಚುರು ಲೋಕಸಭಾ ಕ್ಷೇತ್ರದ ಸಂಸದ ರಾಹುಲ್ ಕಸ್ವಾನ್ ಮತ್ತು ಹಿಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಕಾಂಗ್ರೆಸ್ ಸೇರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.