ನವದೆಹಲಿ: ದ್ವೇಷ ಭಾಷಣ ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಧಾನಿ ನರೇಂದ್ರ ಮೋದಿಯವರ ಚುನಾವಣೆ ಸ್ಪರ್ಧೆಗೆ ನಿಷೇಧ ಹೇರುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ಈ ಕುರಿತಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎಸ್.ಸಿ. ಶರ್ಮಾ ನೇತೃತ್ವದ ಪೀಠ ಹೇಳಿದೆ.
ಈ ಸಂಬಂಧ ನೀವು ಅಧಿಕಾರಿಗಳ ಗಮನ ಸೆಳೆದಿದ್ದೀರಾ ಎಂದು ಪ್ರಶ್ನಿಸಿದ ನ್ಯಾಯಾಲಯ, ಮ್ಯಾಂಡಮಸ್ ಮೇಲಿನ ರಿಟ್ ಅರ್ಜಿ ಕುರಿತಂತೆ ನೀವು ಮೊದಲು ಅಧಿಕಾರಿಗಳಿಗೆ ಮನವಿ ಸಲ್ಲಿಸಬೇಕು ಎಂದು ಹೇಳಿದೆ.
ಬಳಿಕ, ಅರ್ಜಿದಾರರು ತಮ್ಮ ಅರ್ಜಿ ಹಿಂಪಡೆದಿದ್ದು, ಮನವಿ ತಿರಸ್ಕರಿಸಲಾಗಿದೆ ಎಂದು ಪೀಠ ಘೋಷಿಸಿದೆ.
ಜನಪ್ರತಿನಿಧಿಗಳ ಕಾಯ್ದೆ ಅಡಿ ಮೋದಿ ಅವರನ್ನು 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರುವಂತೆ ಕೋರಿ ಫಾತಿಮಾ ಎಂಬವರು ತಮ್ಮ ವಕೀಲರಾದ ಆನಂದ್ ಎಸ್ ಜೋಂಧಲೆ ಅವರ ಮೂಲಕ ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.