ADVERTISEMENT

ವರುಣದಲ್ಲಿ ಅಭಿಷೇಕ್ ನಿಷ್ಕ್ರಿಯ, ನನಗೆ ಟಿಕೆಟ್ ಕೊಡಿ: ಜೆಡಿಎಸ್‌ ಮುಖಂಡ ಗಿರೀಶ್‌

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2023, 14:22 IST
Last Updated 10 ಏಪ್ರಿಲ್ 2023, 14:22 IST
   

ಮೈಸೂರು: ‘ವರುಣ ಕ್ಷೇತ್ರದ ಘೋಷಿತ ಅಭ್ಯರ್ಥಿ ಅಭಿಷೇಕ್‌ ಪ್ರಚಾರದಲ್ಲಿ ತೊಡಗಿಲ್ಲ. ಅವರು ಎಲ್ಲಿದ್ದಾರೆ ಎನ್ನುವುದೇ ಯಾರಿಗೂ ತಿಳಿಯುತ್ತಿಲ್ಲ. ಪಕ್ಷದವರೊಂದಿಗೂ ಸಂಪರ್ಕದಲ್ಲಿಲ್ಲ. ಆದ್ದರಿಂದ ನನಗೆ ಅವಕಾಶ ಮಾಡಿಕೊಡಬೇಕು’ ಎಂದು ಮುಖಂಡ ಬಿ.ಆರ್‌.ಗಿರೀಶ್ ಒತ್ತಾಯಿಸಿದರು.

ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕ್ಷೇತ್ರದಲ್ಲಿ ಅಭ್ಯರ್ಥಿಯು ನಿಷ್ಕ್ರಿಯವಾಗಿರುವುದನ್ನು ವರಿಷ್ಠರ ಗಮನಕ್ಕೆ ತರಲಾಗಿದೆ. ಬದಲಿ ಅಭ್ಯರ್ಥಿಗೆ ಅವಕಾಶ ಕೊಡಬೇಕು ಎಂದು ನಿರ್ಧರಿಸಲಾಗಿದೆ. ಆದ್ದರಿಂದ ನನಗೆ ಅವಕಾಶ ದೊರೆಯುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.

‘ಅಭಿಷೇಕ್ ಕ್ಷೇತ್ರದಲ್ಲಿ ಸಂಚರಿಸುತ್ತಿಲ್ಲ. ಇದರಿಂದ ಕಾರ್ಯಕರ್ತರಿಗೆ ಅವರ ಬಗ್ಗೆ ಅಸಮಾಧಾನವಿದೆ. ನಾನು 2013ರಲ್ಲಿ ವರುಣ ಕ್ಷೇತ್ರದಿಂದ ಬಿಎಸ್‌ಆರ್‌ ಕಾಂಗ್ರೆಸ್‌ ಪಕ್ಷದಿಂದ ಕಾಂಗ್ರೆಸ್‌ನ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಸೋತಿದ್ದೆ. ಆ ಅನುಭವ ಇದೆ. ಬಿಜೆಪಿ–ಕಾಂಗ್ರೆಸ್‌ ಹೊಂದಾಣಿಕೆ ಮಾಡಿಕೊಂಡಿರುವ ಬಗ್ಗೆಯೂ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ’ ಎಂದು ತಿಳಿಸಿದರು.

ADVERTISEMENT

ಈ ಬಗ್ಗೆ ಪ್ರತಿಕ್ರಿಯೆಗೆ ಅಭಿಷೇಕ್‌ ಕರೆ ಸ್ವೀಕರಿಸಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.