ಬೆಂಗಳೂರು: ಹಾಸನ ಪ್ರಕರಣವನ್ನು ನೆಪವಾಗಿಟ್ಟುಕೊಂಡು ಎಚ್.ಡಿ. ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಅವರ ಗೌರವಕ್ಕೆ ಕಾಂಗ್ರೆಸ್ ಧಕ್ಕೆ ತರುತ್ತಿದೆ. ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ನಗರ ಪೊಲೀಸ್ ಕಮಿಷನರ್ಗೆ ಜೆಡಿಎಸ್ ದೂರು ಸಲ್ಲಿಸಿದೆ.
ಹಾಸನ ಪ್ರಕರಣದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಪಕ್ಷದ ತಕರಾರು ಇಲ್ಲ. ಆದರೆ, ಕಾಂಗ್ರೆಸ್ ಭವನದ ಬಳಿ ಭಾನುವಾರ ಪ್ರತಿಭಟನೆ ನಡೆಸುವಾಗ ಕೀಳು ಭಾಷೆ ಬಳಸಿದ್ದಾರೆ. ಚಾರಿತ್ರ್ಯಹರಣ ಮಾಡುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಮಾಜಿ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಚೌಡರೆಡ್ಡಿ ತೂಪಲ್ಲಿ ನೇತೃತ್ವದ ನಿಯೋಗ ಸೋಮವಾರ ದೂರು ನೀಡಿದೆ.
ಕೀಳು ಅಭಿರುಚಿಯ ಪೋಸ್ಟರ್ಗಳನ್ನು ಜೆಡಿಎಸ್ ಕಚೇರಿಯ ಗೋಡೆಗಳ ಮೇಲೆ ಅಂಟಿಸಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಪ್ರತಿಭಟನೆಯಲ್ಲೂ ತೇಜೋವಧೆ ಮಾಡುವ ಮಾತುಗಳನ್ನು ಆಡಿದ್ದಾರೆ. ಮಹಿಳಾ ಅಭಿವೃದ್ದಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹಲವರು ಪಕ್ಷದ ನಾಯಕರ ಗೌರವಕ್ಕೆ ಧಕ್ಕೆ ತರುವ ರೀತಿ ಮಾತನಾಡಿದ್ದಾರೆ. ಚಪ್ಪಲಿ, ಪೊರಕೆ ತೋರಿಸಿ ಅಪಚಾರ ಎಸಗಿರುತ್ತಾರೆ ಎಂದು ಆರೋಪಿಸಿದ್ದಾರೆ.
ಇಂತಹ ನಡೆಗಳು ಕಾನೂನು ಪ್ರಕಾರ ಅಪರಾಧ. ಅವರನ್ನು ಬಂಧಿಸಬೇಕು. ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ನಿಯೋಗದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಪ್ರಕಾಶ್, ಪಕ್ಷದ ವಕ್ತಾರರಾದ ಗಂಗಾಧರ ಮೂರ್ತಿ, ಎಚ್.ಎನ್.ದೇವರಾಜು, ರಾಜೂ ಗೌಡ, ನಾಗೇಂದ್ರ ಪ್ರಸಾದ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.