ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಬಳಿಕ ರಾಜ್ಯದ ಹಲವು ನಾಯಕರು ಫೋನ್ ಕರೆ ಮಾಡಿ ಮಾತನಾಡಿದ್ದಾರೆ. ಟಿಕೆಟ್ ವಿಚಾರದ ಬಗ್ಗೆ ಮರು ಚರ್ಚೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಆದ್ದರಿಂದ ನಾಲ್ಕು ದಿನ ಕಾದು ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ನಗರದಲ್ಲಿ ಗುರುವಾರ ನಡೆದ ಸಂಗಣ್ಣ ಕರಡಿ ಬೆಂಬಲಿಗರ ಹಾಗೂ ಅಭಿಮಾನಿಗಳ ಸ್ವಾಭಿಮಾನಿ ಸಮಾವೇಶದಲ್ಲಿ ಭಾವಾವೇಶದಿಂದ ಮಾತನಾಡಿದ ಅವರು ಎರಡು ಬಾರಿ ಸಂಸದನಾಗಿ ಜನಪರ ಕೆಲಸ ಮಾಡಿದರೂ ಕೆಲವರ ಕುತಂತ್ರದಿಂದ ನನಗೆ ಟಿಕೆಟ್ ತಪ್ಪಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನನಗೆ ಕಾರ್ಯಕರ್ತರು ಹಾಗೂ ಬೆಂಬಲಿಗರೇ ಪ್ರಜೆಗಳು. ಅವರ ನಿರ್ಧಾರದಂತೆ ನಾಲ್ಕು ದಿನಗಳ ಬಳಿಕ ನಿರ್ಧಾರಕ್ಕೆ ಬರುವೆ ಎಂದರು.
ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ರಾಮದಾಸ್, ಪ್ರಲ್ಹಾದ ಜೋಶಿ, ನಳಿನ್ ಕುಮಾರ್ ಕಟೀಲ್ ಮತ್ತು ಸುನಿಲ್ ಕುಮಾರ್ ಸೇರಿದಂತೆ ಪಕ್ಷದ ಹಲವರು ಕರೆ ಮಾಡಿ ಮಾತನಾಡಿದ್ದಾರೆ. ಎರಡು–ಮೂರು ದಿನಗಳಲ್ಲಿ ಪಕ್ಷದ ವರಿಷ್ಠರು ನನ್ನನ್ನೇ ಕರೆಯಿಸಿಕೊಳ್ಳಬಹುದು ಅಥವಾ ಕೊಪ್ಪಳಕ್ಕೆ ಬರಬಹುದು ಎಂದು ಭರವಸೆ ವ್ಯಕ್ತಪಡಿಸಿದರು.
ಬೆಂಬಲಿಗರ ಸಮಾವೇಶದಲ್ಲಿ ಪಾಲ್ಗೊಂಡವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸ್ಥಳೀಯ ಬಿಜೆಪಿ ನಾಯಕರು ಎಚ್ಚರಿಕೆ ನೀಡಿದ್ದಾರೆ. ಆ ರೀತಿ ಶಿಸ್ತು ಕ್ರಮ ಕೈಗೊಂಡರೆ ಬಿಜೆಪಿಯಲ್ಲಿ ಎಲ್ಲರೂ ಖಾಲಿಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು. ಸ್ಥಳೀಯ ಮುಖಂಡರ ವಿರುದ್ಧವೂ ಅವರು ಹರಿಹಾಯ್ದರು.
ಸಾಕಷ್ಟು ಬೆಂಬಲಿಗರು ಕೊಪ್ಪಳ ಕ್ಷೇತ್ರದ ಬಿಜೆಪಿ ಟಿಕೆಟ್ ಕುರಿತು ಮರು ಪರಿಶೀಲಿಸಬೇಕು ಇಲ್ಲವಾದರೆ ಸ್ವತಂತ್ರವಾಗಿ ಸ್ಪರ್ಧೆ ಮಾಡಬೇಕು ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಗಣ್ಣ ಕರಡಿ ನಾಲ್ಕು ದಿನಗಳ ಬಳಿಕ ಮುಂದಿನ ನಿರ್ಧಾರ ಮಾಡೋಣ. ಅಲ್ಲಿಯ ತನಕ ಶಾಂತ ರೀತಿಯಿಂದ ಇರಬೇಕು ಎಂದು ಮನವಿ ಮಾಡಿದರು.
ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಗಂಗಾವತಿ, ಕನಕಗಿರಿ, ಸಿಂಧನೂರು, ಮಸ್ಕಿ ಮತ್ತು ಸಿರಗುಪ್ಪ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಮುಖಂಡರು, ಸಂಗಣ್ಣ ಕರಡಿ ಬೆಂಬಲಿಗರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.