ಕಿರುತೆರೆಯಲ್ಲಿ ಛಾಪು ಮೂಡಿಸಿರುವ ಹೇಮಂತ್ ಹೆಗಡೆ ನಿರ್ದೇಶಿಸಿ ನಟಿಸಿರುವ ‘ನಾ ನಿನ್ನ ಬಿಡಲಾರೆ’ ಸಿನಿಮಾದ ಮುಹೂರ್ತ ಇತ್ತೀಚೆಗೆ ನಡೆಯಿತು. ಚಿತ್ರದಲ್ಲಿ ನಾಯಕಿಯಾಗಿ ಅಪೂರ್ವ ನಟಿಸುತ್ತಿದ್ದು, ಜುಲೈ ಮಾಸಾಂತ್ಯದಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.
ಚಿತ್ರದ ಮೊದಲ ಸನ್ನಿವೇಶಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್ ಕ್ಲ್ಯಾಪ್ ಮಾಡಿದರು. ನೈಸ್ ಸಂಸ್ಥೆಯ ಅಶೋಕ್ ಖೇಣಿ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರಕ್ಕೆ ‘ಘೋಸ್ಟ್ 2.0’ ಅಡಿಬರಹವಿದೆ.
‘ಇದೊಂದು ಹಾರಾರ್ ಜಾನರ್ನ ಚಿತ್ರ’ ಎಂದು ಮಾತು ಆರಂಭಿಸಿದ ಹೇಮಂತ್ ಹೆಗಡೆ, ‘ಈ ಸೂಪರ್ಹಿಟ್ ಚಲನಚಿತ್ರದ ಶೀರ್ಷಿಕೆ ನಮ್ಮ ಚಿತ್ರದ ಕಥೆಗೆ ಸೂಕ್ತವಾಗಿದೆ. ಹಾಗಾಗಿ ಈ ಶೀರ್ಷಿಕೆ ಇಟ್ಟಿದ್ದೇವೆ. ಆದರೆ ಹಳೆಯ ‘ನಾ ನಿನ್ನ ಬಿಡಲಾರೆ’ ಚಿತ್ರದ ಕಥೆಯೇ ಬೇರೆ. ಈ ಚಿತ್ರದ ಕಥೆಯೇ ಬೇರೆ. ಕನ್ನಡದಲ್ಲಿ ಒಂದೊಳ್ಳೆ ಹಾರಾರ್ ಜಾನರ್ನ ಚಿತ್ರ ಬಂದು ಬಹಳ ಸಮಯವಾಗಿದೆ. ಜುಲೈ ಅಂತ್ಯದ ವೇಳೆಗೆ ಚಿತ್ರೀಕರಣ ಆರಂಭವಾಗಲಿದೆ. ಹೊಸನಗರದ ಬಳಿ ನೂರೈವತ್ತು ವರ್ಷಗಳ ಹಳೆಯ ಮನೆಯಲ್ಲಿ ಮೂವತ್ತು ದಿನಗಳ ಚಿತ್ರೀಕರಣ ನಡೆಯಲಿದೆ. ನನ್ನ ಹೆಂಡತಿ ಪಾತ್ರದಲ್ಲಿ ಅಪೂರ್ವ ನಟಿಸುತ್ತಿದ್ದಾರೆ. ಭಾವನಾ ರಾಮಣ್ಣ ಅವರು ದೆವ್ವದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕಿಶೋರ್, ಮಕರಂದ್ ದೇಶಪಾಂಡೆ, ಶಂಕರ್ ಅಶ್ವಥ್, ಶರತ್ ಲೋಹಿತಾಶ್ವ, ಸುಚೇಂದ್ರ ಪ್ರಸಾದ್, ರೇವಣ್ಣ ಸಿದ್ದಯ್ಯ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ’ ಎಂದು ತಿಳಿಸಿದರು.
ಅನ್ವಿತಾ ಆರ್ಟ್ಸ್ ಲಾಂಛನದಲ್ಲಿ ಶಶಿಕಿರಣ್ ರಂಗನಾಥ್, ಕಿರಣ್ ನಾಗರಾಜ್ ಹಾಗೂ ಬಾಲಕೃಷ್ಣ ಪೆರುಂಬಲ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.